ಚಿಕ್ಕಮಗಳೂರು: ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಆಡಳಿತವಿದ್ದರೂ ಸಹ ಜನಪರವಾದ ಆಡಳಿತ ನಡೆಸಲು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ದೂರಿದರು.
ಅವರು ಇಂದು ನಗರದ ತಾಲ್ಲೂಕು ಕಛೇರಿ ಆವರಣದಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ದಿನೇದಿನೆ ಏರುತ್ತಿರುವ ಪೆಟ್ರೋಲ್, ಡಿಸೇಲ್, ಗ್ಯಾಸ್ ಹಾಗೂ ಪಡಿತರ ಬೆಲೆ ಏರಿಕೆಯನ್ನು ವಿರೋಧಿಸಿ ಎರಡನೇ ಹಂತದ ಚಳುವಳಿಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಜನಪರ ಆಡಳಿತ ನಡೆಸುವ ಚಿಂತನೆಯನ್ನು ಮಾಡದೇ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಆಗದೇ ಸಾಮಾರಸ್ಯ ಹಾಳು ಮಾಡಲು ಬಿಜೆಪಿ ಮುಂದಾಗಿದೆ. ದಿನನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಬದುಕಲು ಸಾಧ್ಯವಾಗುತ್ತಿಲ್ಲ ಎಂದರು.
ಕುವೆಂಪು, ಬಸವಣ್ಣ ಹುಟ್ಟಿದ ನಾಡಿನಲ್ಲಿ ಅಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಜನರು ಬದುಕುತ್ತಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದ ಶಾಸಕರು ಜವಾಬ್ದಾರಿ ಮರೆತು ಬೇಜವಾಬ್ದಾರಿ ತೋರಿಸುತ್ತಿದ್ದಾರೆ. ಈ ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿರುವ ಕ್ಷೇತ್ರದ ಶಾಸಕರ ಕೊಡುಗೆ ಶೂನ್ಯ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಿದರೆ, ಬಿಜೆಪಿ ಸಂವಿಧಾನ ವಿರೋಧಿಯಾಗಿ ಆಡಳಿತ ನಡೆಸುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಕಾಂಗ್ರೆಸ್, ಎಲ್ಲಾ ಜನಾಂಗದವರ ಬಗ್ಗೆ ಚಿಂತನೆ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು ಮುಂದಾಗಲಿದೆ ಎಂದರು.
ಸರ್ಕಾರಿ ವ್ಯವಸ್ಥೆ ಹಾಗೂ ಆದಾಯವನ್ನು ಲೂಟಿ ಮಾಡಲು ಹೊರಟಿರುವ ಬಿಜೆಪಿ ನಾಯಕರ ವಿರುದ್ದ ಗಟ್ಟಿಯಾದ ಧ್ವನಿಯಿಂದ ಹೋರಾಟ ಮಾಡುವ ಮೂಲಕ ಜನ ವಿರೋಧಿಯಿಂದ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿಯನ್ನು ಕಿತ್ತೊಗಿಯಲು ಮುಂದಾಗುವಂತೆ ಕರೆ ನೀಡಿದರು.
Related