ಹೊಸನಗರ: ಇತ್ತೀಚಿನ ವರ್ಷಗಳಲ್ಲಿ ಸ್ತ್ರೀಯರು ಸಂಘಗಳಲ್ಲಿ ಸಕ್ರಿಯರಾಗಿದ್ದು, ವ್ಯವಹಾರಿಕ ಜ್ಞಾನ ಬೆಳೆಸಿಕೊಳ್ಳುತ್ತಿರುವುದು ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಹೇಳಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸ್ತ್ರೀಶಕ್ತಿ ಯೋಜನೆಯಡಿ ಅಮೃತ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಉದ್ದಿಮೆಯ ಪ್ರೋತ್ಸಾಹ ಧನದ ಚೆಕ್ ವಿತರಣೆ ನಡೆಸಿ ಮಾತನಾಡಿದರು.
ಕೆಲ ದಶಕಗಳ ಹಿಂದೆ ಇದ್ದ ಸ್ತ್ರೀಯರ ಪರಿಸ್ಥಿತಿ ಇಂದು ಸುಧಾರಿಸಿದೆ. ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಕೇವಲ ಮನೆ ಕೆಲಸಗಳಿಗೆ ಸೀಮಿತರಾಗಿದ್ದ ಗ್ರಾಮೀಣ ಮಹಿಳೆಯರು ಇಂದು ಸ್ವತಂತ್ರವಾಗಿ ವ್ಯವಹಾರ ನಡೆಸುವಷ್ಟರ ಮಟ್ಟಿಗೆ ತಿಳುವಳಿಕೆ ಹೊಂದಿದ್ದಾರೆ. ಸಾಮಾಜಿಕವಾಗಿ ಸಹಾ ಸಾಕಷ್ಟು ಬದಲಾವಣೆಗಳಾಗಿವೆ. ರಾಜಕೀಯ ಕ್ಷೇತ್ರದಲ್ಲಿಯೂ ಸಹಾ ಮಹಿಳೆಯರು ಮುಂಚೂಣಿಗೆ ಬರುತ್ತಿರುವುದು ದೇಶದ ಹಿತದೃಷ್ಠಿಯಿಂದ ಉತ್ತಮ ಬೆಳವಣಿಗೆಯಾಗಿದೆ ಎಂದರು.
ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡುಎಲ್ಲಾ ರಂಗಗಳಲ್ಲಿ ಮಹಿಳೆಯರು ಇನ್ನಷ್ಟು ಪ್ರಗತಿ ಹೊಂದಬೇಕು. ಈ ದಿಸೆಯಲ್ಲಿ ಸಂಘಗಳು ಸಕ್ರಿಯವಾಗಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಎನ್.ಆರ್.ದೇವಾನಂದ, ಎಂಸಿಎ ನಿರ್ದೇಶಕ ಎಚ್.ಆರ್.ತೀರ್ಥೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ, ಉಪಾಧ್ಯಕ್ಷೆ ಕೃಷ್ಣವೇಣಿ, ಮುಖ್ಯಾಧಿಕಾರಿ ಬಾಲಚಂದ್ರಪ್ಪ, ತಹಸೀಲ್ದಾರ್ ವಿ.ಎಸ್.ರಾಜೀವ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿ.ಆರ್.ಪ್ರವೀಣ್, ಸಿಡಿಪಿಓ ಶಶಿರೇಖಾ, ರಾಜು, ಮನೋಧರ, ಶಾಸಕರ ಆಪ್ತ ಕಾರ್ಯದರ್ಶಿ ಮಂಡಾಣಿ ಮೋಹನ್, ಮತ್ತಿತರರು ಇದ್ದರು.
Related