ಬರಗಾಲ ಪೀಡಿತ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಸೂಚನೆ

0 296

ಕೊಪ್ಪ: ಬರಗಾಲ (Droughts) ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ (K.J. George) ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪ (Koppa) ತಾಲ್ಲೂಕಿನ ಪುರಭವನದಲ್ಲಿ ಮಂಗಳವಾರ ಶೃಂಗೇರಿ (Sringeri) ವಿಧಾನಸಭಾ ಕ್ಷೇತ್ರ ಹಾಗೂ ಮೂಡಿಗೆರೆ (Mudigere) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬರ ನಿರ್ವಹಣೆ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬರ ಪರಿಹಾರ ಕಾಮಗಾರಿ ಹಾಗೂ ಕಾರ್ಯಕ್ರಮಗಳನ್ನು ವಿಳಂಬ ಮಾಡದೆ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು. ಪ್ರತಿ ಗ್ರಾಮ ಮತ್ತು ಪಟ್ಟಣಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ದನಕರುಗಳಿಗೆ ಅಗತ್ಯವಿರುವ ಮೇವು 21 ರಿಂದ 23 ವಾರಗಳಿಗೆ ಸಾಕಾಗುವಷ್ಟು ಇದ್ದು, ಮುಂದೆ ಮೇವಿಗೆ ಕೊರತೆಯಾಗದಂತೆ ರೈತರಿಗೆ ಮೇವು ಕಿಟ್‌ಗಳನ್ನು ವಿತರಿಸಿ ನಮ್ಮ ಜಿಲ್ಲೆಗೆ ಸಾಕಾಗುವಷ್ಟು ಮೇವನ್ನು ಬೆಳೆಯಬೇಕು. ಮಲೆನಾಡು ಪ್ರದೇಶದಲ್ಲಿ ಮೇವು ಬೆಳೆಯಲು ಉತ್ತಮ ವಾತಾವರಣವಿದ್ದು, ಪಕ್ಕದ ಜಿಲ್ಲೆಯಿಂದ ಮೇವು ಪೂರೈಕೆಗೆ ಬೇಡಿಕೆ ಬಂದ ಸಂದರ್ಭದಲ್ಲಿ ಮೇವು ಲಭ್ಯತೆಗನುಗುಣವಾಗಿ ಮೇವು ಬೆಳೆದು ಒದಗಿಸುವಂತೆ ತಿಳಿಸಿದ ಸಚಿವರು  ನಮ್ಮ ಜಿಲ್ಲೆಗೆ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಲ್ಲಿಯವರೆಗೆ ಕುಡಿಯುವ ನೀರು, ಮೇವು ಹಾಗೂ ಇತರೆ ಸೌಲಭ್ಯಗಳ ಕೊರತೆ ಕಂಡು ಬಂದಿಲ್ಲ. ಕುಡಿಯುವ ನೀರಿಗೆ ಸಮಸ್ಯೆ ಕಂಡು ಬಂದರೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಹಾಗೂ ಖಾಸಗಿ ಬೋರ್‌ವೆಲ್ ಗಳನ್ನು ಗುರುತಿಸಲಾಗಿದೆ.

ದನಕರುಗಳಿಗೆ ಜಿಲ್ಲೆಯಲ್ಲಿ ಮುಂದಿನ ೪೮ ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ. ನೀರಿನ ಸೌಲಭ್ಯವಿರುವ ರೈತರಿಗೆ ಪಶುಪಾಲನೆ ಇಲಾಖೆಯ ಮೂಲಕ ಉಚಿತವಾಗಿ ಮೇವು ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.

ಕುಡಿಯುವ ನೀರಿಗಾಗಿ ಕೊರೆಯುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬದಲು ಸೋಲಾರ್ ವ್ಯವಸ್ಥೆ ಆಳವಡಿಸುವಂತೆ ತಿಳಿಸಿದ ಸಚಿವರು ಮಳೆಗಾಲ ಮುಗಿದ ನಂತರ ರಸ್ತೆಗಳ ದುರಸ್ತಿಗೆ ಕ್ರಮವಹಿಸಲಾಗುವುದು. ಅಧಿಕಾರಿಗಳು ತಮ್ಮ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಅದನ್ನು ಬಗೆಹರಿಸಲು ಕ್ರಮವಹಿಸಬೇಕು. ಒಂದು ವೇಳೆ ಜಟಿಲ ಸಮಸ್ಯೆಗಳಿದ್ದರೆ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಕ್ರಮವಹಿಸಬೇಕು ಒಟ್ಟಿನಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.

ಶೃಂಗೇರಿ ಕ್ಷೇತ್ರ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಕ್ಷೇತ್ರದಲ್ಲಿ ಯಾವುದೇ ಸಂದರ್ಭದಲ್ಲಿ ಏನೇ ಸಮಸ್ಯೆಗಳು ಕಂಡು ಬಂದರು. ಅವುಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಕೊಪ್ಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಜಿಲ್ಲಾ ಮಟ್ಟದ ಹಾಗೂ ಶೃಂಗೇರಿ, ಮೂಡಿಗೆರೆ ತಾಲ್ಲೂಕುಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Leave A Reply

Your email address will not be published.

error: Content is protected !!