ಲೈಂಗಿಕ ದೌರ್ಜನ್ಯದಿಂದ ಅಪ್ರಾಪ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಪ್ರಕರಣ ; ಆರೋಪಿಗೆ ದಂಡದ ಜೊತೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಶಿವಮೊಗ್ಗ: ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಜೊತೆಗೆ 1.25 ಲಕ್ಷ ರೂ.ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡಲು ಸರ್ಕಾರಕ್ಕೆ ಆದೇಶ ನೀಡಿದೆ.
ಏನಿದು ಘಟನೆ ?
2020ನೇ ಸಾಲಿನಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 23 ವರ್ಷದ ಯುವಕನೊಬ್ಬನು 16 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಇದರಿಂದ ಮನನೊಂದ ಬಾಲಕಿಯು ನೇಣು ಬಿಗಿದುಕೊಂಡು ಮೃತಪಟ್ಟಿರುತ್ತಾಳೆಂದು ಮೃತ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ ಹೊಸನಗರ ಸಿಪಿಐ ಗಿರೀಶ್ ಬಿ.ಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಮತ್ತು ಮಮತ ಪ್ರಕರಣದ ವಾದ ಮಂಡಿಸಿದ್ದು FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗಿತ್ತು.
ಆರೋಪಿ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಲತಾ ನ. 04 ರಂದು ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ ಹಾಗೂ ಮೃತ ಬಾಲಕಿಯ ಕುಟುಂಬಸ್ಥರಿಗೆ ಪರಿಹಾರವಾಗಿ ಸರ್ಕಾರದಿಂದ 17 ಲಕ್ಷ ರೂ. ನೀಡಲು ಆದೇಶಿಸಿದ್ದಾರೆ.