ರಿಪ್ಪನ್ಪೇಟೆ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿಯನ್ನು ಪಟ್ಟಣದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ, ರಿಪ್ಪನ್ಪೇಟೆ ಪಿಎಸ್ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ಸಾಗರ ರಸ್ತೆಯ ಕಾಲೇಜು ಮುಂಭಾಗದಲ್ಲಿರುವ ಮೀನಾಕ್ಷಮ್ಮ ಎಂಬುವವರ ಮನೆ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ 8.76 ಕ್ವಿಂಟಾಲ್ ಅಕ್ಕಿಯನ್ನು ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಚನಾಲ ಗ್ರಾಮದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಕರಣದ ಮಾಹಿತಿ ತಿಳಿಯುತಿದ್ದಂತೆ ಕೂಡಲೇ ತಹಸೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ ತಾಲ್ಲೂಕಿನ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಕ್ರಮಕ್ಕೆ ಸೂಚಿಸಿದ್ದಾರೆ. ಆಹಾರ ನಿರೀಕ್ಷಕರಾದ ನಾಗರಾಜ್ ಮತ್ತು ಬಾಲರಾಜ್ ಸ್ಥಳಕ್ಕೆ ಧಾವಿಸಿ ಅಕ್ಕಿಯ ಪ್ರಮಾಣವನ್ನು ಪರಿಶೀಲಿಸಿ, ಪ್ರಾಥಮಿಕ ತನಿಖೆಯ ನಂತರ ಅವರು ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.
ಈ ಪ್ರಕರಣದ ಹಿಂದೆ ಸಂಘಟಿತ ಜಾಲವಿರುವ ಸಾಧ್ಯತೆಗಳು ಗೋಚರಿಸುತ್ತಿವೆ. ಅಕ್ರಮ ದಾಸ್ತಾನು ಮತ್ತು ಕಳ್ಳಸಾಗಣೆ ಮೂಲಕ ಬಡವರಿಗೆ ತಲುಪಬೇಕಾದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಅನೇಕ ಪ್ರಕರಣಗಳು ರಾಜ್ಯದ ವಿಭಿನ್ನ ಭಾಗಗಳಲ್ಲಿ ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ರಿಪ್ಪನ್ಪೇಟೆ ಘಟನೆಯೂ ಒಂದು ದೊಡ್ಡ ಜಾಲದ ಭಾಗವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ರಾಮಚಂದ್ರ, ಉಮೇಶ್, ಪರಮೇಶ್, ಸಂತೋಷ್ ಹಾಗೂ ಅವಿನಾಶ್ ಇದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.