Shivamogga ಶಿವಮೊಗ್ಗ

ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ ; ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ ; ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನಾದಿ ಕಾಲದಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ನೋಟಿಸ್ ನೀಡುವುದು, ತೊಂದರೆ ಕೊಟ್ಟು ಒಕ್ಕಲೆಬ್ಬಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬಾರದು. ಹಾಗೂ ರೈತರ ಪರವಾಗಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪುಗಳನ್ವಯ ನಡೆದುಕೊಳ್ಳಬೇಕೆಂದು ಸಂಬಂಧಿಸಿದ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಹೊಸದಾಗಿ ಒತ್ತುವರಿಗೆ ಅವಕಾಶ ಮಾಡಬಾರದು. ಹಾಗೂ 27-04-1978 ರ ಪೂರ್ವದ ಅರಣ್ಯ ಒತ್ತುವರಿವನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಭೂ ಮಂಜೂರಾತಿ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಮಂಜೂರು ಮಾಡಲಾದ ರೈತರ ಸಾಗುವಳಿ/ವಸತಿ ಭೂಮಿಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವ ಸಂಬಂಧ ಕೈಗೊಂಡ ಕ್ರಮದ ಕುರಿತು ವರದಿಯನ್ನು ನೀಡಬೇಕೆಂದು ತಿಳಿಸಿದರು.

ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಮಲೆನಾಡಿನ ಭಾಗದಲ್ಲಿ ರೈತನ್ನು ಒಕ್ಕಲೆಬ್ಬಿಸುವ ಸಂಬಂಧ ನೋಟಿಸ್ ನೀಡಲಾಗುತ್ತಿದೆ. ಕೆಲವೆಡೆ ತೊಂದರೆ ನೀಡಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದರು.

ಸಿಸಿಎಫ್ ಹನುಮಂತಪ್ಪ ಮಾತನಾಡಿ, ಪಿಎಫ್ ಮತ್ತು ಎಂಎಫ್ ಪ್ರಕರಣಗಳು ಕಿರು ಅರಣ್ಯ ವ್ಯಾಪ್ತಿಗೆ ಬರುತ್ತವೆ. ಇವುಗಳನ್ನು ಸೆಟ್ಲ್ ಮಾಡಬಹುದು, ಈ ಸಂಬಂಧ 375 ಅಧಿಸೂಚನೆಗಳಿವೆ ಎಂದು ತಿಳಿಸಿದರು.

ರಸ್ತೆ ಕಾಮಗಾರಿ ಪೂರ್ಣಗೊಳಿಸಿ :

ಸಚಿವರು, ಜಿಲ್ಲೆಯ ಎಲ್ಲ ರಾಜ್ಯ ಹೈವೇಗಳು, ಮುಖ್ಯ ರಸ್ತೆಗಳನ್ನು ನವೆಂಬರ್ ಅಂತ್ಯದೊಳಗೆ ಮತ್ತು ಇತರೆ ಎಲ್ಲ ರಸ್ತೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮಳೆ ಮುಗಿದ ತಕ್ಷಣ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಬೇಕು. ಗುಂಡಿಗಳನ್ನು ಮುಚ್ಚುವ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಗುಂಡಿಗಳಿಂದಾಗಿ ದ್ವಿಚಕ್ರ ವಾಹನಗಳ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಸಾವು-ನೋವು ಸಂಭವಿಸುತ್ತಿದೆ. ಆದ್ದರಿಂದ ಶೀಘ್ರವಾಗಿ ಗುಂಡಿಗಳನ್ನು ಮುಚ್ಚಬೇಕು ಮತ್ತು ರಸ್ತೆಯ ಎಡ್ಜ್ ಹಾಗೂ ಮಧ್ಯಭಾಗವನ್ನು ಮಾರ್ಕಿಂಗ್ ಮಾಡಬೇಕೆಂದು ಸೂಚಿಸಿದ ಅವರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು. ಹಾಗೂ ಎನ್‌ಹೆಚ್ ಕಾಮಗಾರಿಗಳನ್ನು ನಿಗದಿತ ವೇಳೆಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದರು.

ನೀರಾವರಿ ಇಲಾಖೆ :

ಸೊರಬ ತಾಲ್ಲೂಕಿನ ಗುಡುವಿ, ಯಡಗೊಪ್ಪ, ದಂಡಾವತಿ ಮತ್ತು ವರದಾ ನದಿಗಳಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ ರೂ.160 ಕೋಟಿ ಮೊತ್ತದ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಬೇಕು. ಹಾಗೂ ಕಾಲುಸಂಕಗಳ ಕಾಮಗಾರಿಯನ್ನು ಸಹ ಕೈಗೆತ್ತಿಕೊಳ್ಳಬೇಕು. ಅಧಿಕಾರಿಗಳ ನಡುವೆ ಸಮನ್ವಯತೆ ಇದ್ದಲ್ಲಿ ಕಾಮಗಾರಿ ಕ್ಷಿಪ್ರಗತಿಯಲ್ಲಿ ಆಗಲು ಸಾಧ್ಯವಾಗುತ್ತದೆ. ಆದ್ದರಿಂದ ಎಲ್ಲರೂ ಒಂದು ತಂಡದಂತೆ ಸಮನ್ವಯದೊಂದಿಗೆ ಕೆಲಸ ಮಾಡಬೇಕೆಂದರು.

ಸೊರಬ ತಾಲ್ಲೂಕು ಮಾವಿನಹೊಳೆ, ಕೆರೆಹಳ್ಳಿ, ಜಂಗಿನಕೊಪ್ಪ ಗ್ರಾಮಗಳಲ್ಲಿ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಮತ್ತು ಬ್ಯಾರೇಜ್ ನಿರ್ಮಾಣ ಕಾಮಗಾರಿಗಳ ಕುರಿತು ವರದಿ ಪಡೆದುಕೊಂಡರು.

ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಘೋಷಿತವಾಗಿರುವ ಕೊಳಚೆ ಪ್ರದೇಶಗಳ ಕುರಿತು ಪ್ರಗತಿ ಪರಿಶೀಲಿಸಿದ ಸಚಿವರು, ಗ್ರಾಮೀಣ ಭಾಗದ ಕೊಳಚೆ ಪ್ರದೇಶಗಳಲ್ಲಿನ ಮನೆಗಳಿಗೆ ಹಕ್ಕುಪತ್ರ ನೀಡುವುದು ಹಾಗೂ ನಗರ ಪ್ರದೇಶದಲ್ಲಿನ ಕೊಳಚೆ ಪ್ರದೇಶಗಳಲ್ಲಿನ ಮನೆಗಳಿಗೆ 94 ಸಿ ಮತ್ತು ಸಿಸಿ ನೀಡುವ ಕುರಿತು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಶಾಸಕರು, ಸಾಗರದ ಕೊಳಚೆ ಪ್ರದೇಶದಲ್ಲಿನ ಮನೆ ನಿರ್ಮಾಣ ಕಾಮಗಾರಿ ನಿಂತು 12 ವರ್ಷ ಆಯ್ತು. 150 ಮನೆಗಳ ಕೆಲಸ ಬಾಕಿ ಇದ್ದು, ಶೀಘ್ರದಲ್ಲಿ ಈ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದರು.

ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಮಾತನಾಡಿ, ಶಿವಮೊಗ್ಗ ಮಹಾನಗರಪಾಲಿಕೆಯ ವಿವಿಧ ವಾರ್ಡ್ಗಳ ವ್ಯಾಪ್ತಿಯಲ್ಲಿ ಮಹಾನಗರಪಾಲಿಕೆ ಒಡೆತನಕ್ಕೆ ಸೇರಿದ ನಿವೇಶನಗಳಲ್ಲಿ 40 ವರ್ಷಗಳಿಂದ ವಾಸ ಮಾಡುತ್ತಿರುವ ಬಡ ಕುಟುಂಬಗಳ ಮನೆಗಳನ್ನು ಸಕ್ರಮಗೊಳಿಸುವ ಸಂಬಂಧ 9000 ಅರ್ಜಿಗಳನ್ನು ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಚಿವರು, ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿಸಬೇಕು. ಯುದ್ದೋಪಾದಿಯಲ್ಲಿ ಈ ಕಾರ್ಯ ಕೈಗೊಂಡು ನವೆಂಬರ್ ಅಂತ್ಯದೊಳಗೆ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅಪಘಾತ, ಅನಾಹುತಗಳ ಸಂಖ್ಯೆ ಹೆಚ್ಚಲಿದೆ ಎಂದು ತಿಳಿಸಿದರು.

ಸಚಿವರು ಜಿಲ್ಲೆಯಲ್ಲಿ 62 ಪ್ರವಾಸಿ ತಾಣಗಳಿದ್ದು ಈ ಕುರಿತು ಹೋರ್ಡಿಂಗ್, ಮಾಹಿತಿ ಫಲಕಗಳ ಮೂಲಕ ಪ್ರಚಾರ ಮಾಡಬೇಕು ಎಂದು ತಿಳಿಸಿದರು.

ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಜಿಲ್ಲೆಯು 6ನೇ ಸ್ಥಾನದಲ್ಲಿದೆ. ಶೇ.96 ಸಮೀಕ್ಷೆ ಮುಗಿದಿದ್ದು, ನಗರದಲ್ಲಿ ಇನ್ನು 8000 ಮನೆಗಳು ಹಾಗೂ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮನೆಗಳು ಸಮೀಕ್ಷೆಗೆ ಬಾಕಿ ಇದ್ದು, ಈ ಸಮೀಕ್ಷೆ ನಂತರ ಶರಾವತಿ ಸಂತ್ರಸ್ತರಿಗೆ ಸಂಬಂಧಿಸಿದಂತೆ ಬಂದಿರುವ ಆಕ್ಷೇಪಣೆಗಳನ್ನು ಆಲಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಡಿಸೆಂಬರ್ ನಂತರ ಮೀಸಲು ಅರಣ್ಯ ಕ್ಷೇತ್ರದ ಕುರಿತು ಪರಿಶೀಲನೆ ನಡೆಸಲಾಗುವುದು.
– ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು

ಸಭೆಯಲ್ಲಿ ​​ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಚೇತನ್ ಕೆ, ​ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಹೇಮಂತ್ ಎನ್, ಎಸ್ ಪಿ ಜಿ.ಕೆ.ಮಿಥುನ್ ಕುಮಾರ್, ​ಅರಣ್ಯ, ನೀರಾವರಿ, ಕಂದಾಯ, ಪಿಡಬ್ಲ್ಯೂಡಿ, ಕೆಎನ್‌ಎನ್‌ಎಲ್ ಇತರೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Leave a Comment