ಸಾಗರ ; ತಾಲೂಕಿನ ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಂಕೇರಿ ಗ್ರಾಮದಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಹಣ ದೋಚಿ ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಮಾಹಿತಿ ಪ್ರಕಾರ, ಕಬ್ಬಳ್ಳಿ ಗ್ರಾಮದ ರೈತ ಹುಚ್ಚಪ್ಪ ಅವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಕಳ್ಳನು ಕಿಟಕಿ ಹಾಗೂ ಬಾಗಿಲುಗಳನ್ನು ಮುರಿದು ಒಳನುಗ್ಗಿದ್ದಾನೆ. ಮನೆಯಲ್ಲಿ ಸಂಗ್ರಹಿಸಿದ್ದ ಸುಮಾರು ₹50,000 ನಗದು ಹಣ ಹಾಗೂ ಕೆಲವು ಚಿನ್ನಾಭರಣಗಳನ್ನು ಕದ್ದಿರುವುದಾಗಿ ಹೇಳಲಾಗಿದೆ. ರೈತ ಈ ಹಣವನ್ನು ಬೆಲ್ಲ ಮಾರಾಟದಿಂದ ಸಂಗ್ರಹಿಸಿಕೊಂಡಿದ್ದರೆಂದು ತಿಳಿದುಬಂದಿದೆ.
ಕಳ್ಳತನ ನಡೆಸಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವೇಳೆ ಗ್ರಾಮಸ್ಥರಿಗೆ ಅನುಮಾನ ವ್ಯಕ್ತವಾಗಿದ್ದು, ಕೆಲವೇ ಕ್ಷಣಗಳಲ್ಲಿ ಕಳ್ಳನನ್ನು ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗೆ ಅರೆಬೆತ್ತಲೆಗೊಳಿಗೆ ಥಳಿಸಿರುವ ಮಾಹಿತಿ ಲಭ್ಯವಾಗಿದೆ.
ನಂತರ ಗ್ರಾಮಸ್ಥರು ಆರೋಪಿಯನ್ನು ವಾಹನದ ಮೂಲಕ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆದೊಯ್ದು ಒಪ್ಪಿಸಿದರು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂಬಂಧ ತನಿಖೆ ಮುಂದುವರಿಸಿರುವ ಪೊಲೀಸರು, ಕಳ್ಳತನ ನಡೆದ ಮನೆ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗೆ ಸಹಚರರಿದ್ದಾರೆಯೇ ಎಂಬುದರ ಕುರಿತು ವಿಚಾರಣೆ ನಡೆಯುತ್ತಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





