ಹೊಸನಗರ ; ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಎಲ್ಲ ಕೆಲಸಗಳಲ್ಲಿಯೂ ಭಾಗಿಯಾಗುತ್ತಿದ್ದಾರೆ. ಆದರೆ ಸಂಬಳ ಕಡಿಮೆ ನೀಡುತ್ತಿದ್ದು ಅವರನ್ನು ಖಾಯಂ ನೌಕರರಾಗಿ ಪರಿಗಣಿಸಿ ಸಂಬಳ ಹೆಚ್ಚಳ ಮಾಡಲೂ ಅವರ ಎಲ್ಲ ಹೋರಾಟಗಳಿಗೂ ನಾವು ಬೆಂಬಲವಾಗಿ ನಿಲ್ಲುತ್ತೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್
ಹೇಳಿದರು.
ಇಲ್ಲಿನ ಆರ್ಯ ಈಡಿಗರ ಸಭಾಭವನದ ಆವರಣದಲ್ಲಿ ತಾಲ್ಲೂಕು ಮಟ್ಟದ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಸುವರ್ಣ ಸಂಭ್ರಮ ಹಾಗೂ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿಗಳು ಶುಭಾರಂಭಗೊಂಡು ಸುಮಾರು 50 ವರ್ಷಗಳು ಕಳೆದಿದೆ. ಹೊಸನಗರ ತಾಲ್ಲೂಕಿನಲ್ಲಿ ಸುಮಾರು 400 ಅಂಗನವಾಡಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸೇವೆ ಮಾಡುತ್ತಿದ್ದಾರೆ ಆದರೆ ಅಲ್ಲಿಂದ ಇಲ್ಲಿಯವರೆಗೆ ಅವರೆಲ್ಲರಿಗೂ ಗೌರವಧನದ ರೂಪದಲ್ಲಿ ಅವರಿಗೆ ಸಂಬಳ ನೀಡುತ್ತಿದ್ದೇವೆ ಇದು ಬೇಸರದ ಸಂಗತಿಯಾಗಿದೆ. ಎಷ್ಟೋ ಕಾರ್ಯಕರ್ತೆಯರು ನಿವೃತ್ತಿ ಹೊಂದಿದ್ದಾರೆ ಆದರೆ ಅವರೆಲ್ಲರಿಗೂ ತಿಂಗಳ ಮಾಸಾಶನವಾಗಲಿ ಬೇರೆ ಯಾವುದೇ ರೀತಿಯಲ್ಲಿಯೂ ಸರ್ಕಾರದ ಸೌಲಭ್ಯ ನೀಡುತ್ತಿಲ್ಲ ಅವರು ತಮ್ಮ ಬೇಡಿಕೆಗಾಗಿ ಹೋರಾಟ ನಡೆಸುತ್ತಿರುವುದು ಸರಿಯಾಗಿದೆ. ಮುಂದಿನ ದಿನಗಳಲ್ಲಿ ಅವರನ್ನು ಖಾಯಂ ನೌಕರರಾಗಿ ಪರಿವರ್ತಿಸುವ ಜೊತೆಗೆ ಮಾಸಾಶನ ನೀಡುವ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಸಂಚಾಲಕರಾದ ಎನ್ ರವೀಂದ್ರ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿ, ನಾವು ಸುಮಾರು 30 ವರ್ಷಗಳಿಂದ ಎಲ್ಲ ಸರ್ಕಾರ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿದ್ದೇವೆ ಆದರೆ ಇಲ್ಲಿಯವರೆಗೆ ಯಾವುದೇ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂ ನೌಕರರೆಂದು ಪರಿಗಣಿಸಿಲ್ಲ. ಮುಂದಿನ ದಿನದಲ್ಲಿ ನಮ್ಮ ಹೋರಾಟ ಉಗ್ರವಾಗಿರಲಿದ್ದು ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಹಾಗೂ ಈಗಿರುವ ಗೌರವಧನವನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ 30 ಸಾವಿರ ಹಾಗೂ ಸಹಾಯಕಿಯರಿಗೆ 15 ಸಾವಿರ ನೀಡಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಅನಿವಾರ್ಯವಾಗಲಿದ್ದು ಪ್ರತಿಯೊಬ್ಬ ಕಾರ್ಯಕರ್ತೆಯರು ಹೋರಾಟಕ್ಕೆ ಅಣಿಯಾಗಬೇಕೆಂದು ಈ ಸಂದರ್ಭದಲ್ಲಿ ಕೇಳಿಕೊಂಡರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶಶಿಕಲಾ ಗಣಪತಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಅಂಗನವಾಡಿ ಫೆಡರೇಶನ್ ರಾಜ್ಯ ಸಂಚಾಲಕ ಎನ್ ರವಿಂದ್ರ ಸಾಗರ್, ಕರ್ನಾಟಕ ರಾಜ್ಯ ಅಂಗನವಾಡಿ ಕಾಯಕರ್ತೆಯರ ಸಂಘದ ಸಹಾಯಕಿಯಾದ ಜಯಮ್ಮ, ಹೊಸನಗರ ತಾಲ್ಲೂಕು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಗಾಯಿತ್ರಿ, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಮೌಳಿ, ಎರಗಿ ಉಮೇಶ್, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್, ಸುಶೀಲಬಾಯಿ, ವಿಶಾಲ ಬಾಯಿ, ಗಾಯಿತ್ರಿ ಹೆಗಡೆ, ವೇದಾವತಿ, ಪುಷ್ಪ, ರೇಣುಕಾ, ತಾಲ್ಲೂಕು ಸಂಘದ ಗೌರವಾಧ್ಯಕ್ಷೆ ತಾರಾ, ಅಧ್ಯಕ್ಷೆ ಶಶಿಕಲಾ, ಸಹಾಯಕಿ ಶರ್ಮಿಳಾ ಉಪಾಧ್ಯಕ್ಷೆ ಜಯಮ್ಮ, ಕಾರ್ಯದರ್ಶಿ ಎಸ್.ಎನ್ ಗೀತಾ ರವಿ, ಲೀಲಾವತಿ, ಸಹಕಾರ್ಯದರ್ಶಿ ಲೀಲಾವತಿ, ದಿವ್ಯ ಮಧು, ಉಮಾ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶಾರದ, ಉತ್ತಮ ಸಹಾಯಕಿ ಪ್ರಶಸ್ತಿ ಪುರಸ್ಕೃತರಾದ ಗೀತಾ ಹಾಗೂ ನಿವೃತ್ತಿ ಹೊಂದಿರುವ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರನ್ನು ಸನ್ಮಾನಿಸಲಾಯಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





