ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಆಗ್ರಹಿಸಿ ಕೈಗೊಂಡಿರುವ ಹೋರಾಟಕ್ಕೆ ಬಿಜೆಪಿ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಲಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಭೌಗೋಳಿಕವಾಗಿ ವಿಸ್ತಾರವಾಗಿದ್ದರೂ ಈ ಹಿಂದೆ ಕ್ಷೇತ್ರ ಮರುವಿಂಗಡಣೆ ಸಂದರ್ಭದಲ್ಲಿ ಹೊಸನಗರ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಿತ್ತು. ಅಂದು ಕುಲದೀಪ್ ಸಿಂಗ್ ಆಯೋಗದ ಎದುರು ನಮ್ಮ ಅಹವಾಲು ಸಲ್ಲಿಸಿದರೂ ಉಪಯೋಗ ಆಗಿರಲಿಲ್ಲ. ಅಂದು ನಡೆದ ಕ್ಷೇತ್ರ ಮರುವಿಂಗಡಣೆ ಅವೈಜ್ಞಾನಿಕವಾಗಿತ್ತು. ಇದಕ್ಕೆ ತಾವೂ ಸೇರಿದಂತೆ ತಾಲೂಕಿನ ಹಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು ಎಂದರು.
2021 ರಿಂದ ಹೊಸನಗರ ಕ್ಷೇತ್ರ ಪುನರ್ರಚನೆಗೆ ಆಗ್ರಹಿಸಿ ಹೋರಾಟಗಳು ಆರಂಭವಾಗಿತ್ತು. ಬಿ.ಎಲ್.ಶಂಕರ್ ಸೇರಿದಂತೆ ಅಂದು ರಾಜ್ಯದ ಹಲವು ನಾಯಕರ ಜೊತೆ ಚರ್ಚೆ ನಡೆಸಲಾಗಿತ್ತು. ಕೊಡಗು, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಕಡೆಗಳಲ್ಲಿ ಇಂತಹದೇ ಸಮಸ್ಯೆ ಎದುರಾಗಿತ್ತು. ಆದರೆ ಅಂದು ಹೋರಾಟಕ್ಕೆ ಸಕಾಲ ಆಗಿರಲಿಲ್ಲ. ಆದರೆ ಈಗ ಕೇಂದ್ರ ಸರ್ಕಾರ ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾವನೆ ರೂಪಿಸಿದೆ. ಶೀಘ್ರದಲ್ಲಿ ಆ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ. ನೂತನ ವಿಧೇಯಕ ಅಂಗೀಕಾರವಾದಲ್ಲಿ ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕ್ಷೇತ್ರ ಪುನರ್ರಚನೆ ಸಂದರ್ಭದಲ್ಲಿ ಹಲವು ತಾಂತ್ರಿಕ ಸಮಸ್ಯೆಗಳಿವೆ. ಇದೊಂದು ಸೂಕ್ಷ್ಮ ವಿಷಯ. ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಲದೊಂದಿಗೆ ವಿಧೇಯಕ ಅಂಗೀಕಾರ ಆಗಬೇಕಿದೆ. ಕೇಂದ್ರ ಸರ್ಕಾರ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ. ಹಾಗಾಗಿ ಇದೊಂದು ಸೂಕ್ಷ್ಮ ವಿಷಯ ಎಂದರು.

ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ಕೈಗೊಂಡಿರುವ ಪಾದಯಾತ್ರೆಗೆ ಬಿಜೆಪಿ ಬೆಂಬಲ ಸೂಚಿಸಿದೆ. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಪಕ್ಷದ ನಾಯಕರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಘೋಷ್ಠಿಯಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಸತೀಶ್, ಎನ್.ಆರ್. ದೇವಾನಂದ್ ಮಾಜಿ ಶಾಸಕ ಬಿ.ಸ್ವಾಮಿರಾವ್, ಎ.ವಿ. ಮಲ್ಲಿಜಾರ್ಜುನ, ಹಾಲಗದ್ದೆ ಉಮೇಶ್, ಎಂ.ಎನ್ ಸುಧಾಕರ್, ಆಲವಳ್ಳಿ ವೀರೇಶ್, ಮಹೇಶ್, ಬಿ. ಯುವರಾಜ್ ಗೌಡ, ಮೆಣಸೆ ಆನಂದಪ್ಪ, ಮಂಡಾನಿ ಮೋಹನ್, ಚಾಲುಕ್ಯ ಬಸವರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





