ಶಿವಮೊಗ್ಗ ; ಜಿಲ್ಲೆಯ ಮಲೆನಾಡು ಭಾಗಗಳಾದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು ತೀವ್ರ ಜಾಗೃತಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಕೆ.ಎಸ್. ತಿಳಿಸಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ಅರಳಸುರುಳಿ, ಮೇಗರವಳ್ಳಿ, ಕಟಗಾರು, ಹಾರೋಗುಳಿಗೆ, ಯೋಗಿಮಠ, ಮಾಳೂರು, ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿ, ಹೊಸನಗರ ತಾಲ್ಲೂಕಿನ ಸೊನಲೆ, ಹುಂಚ, ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿ ಹಾಗೂ ಸಾಗರ ತಾಲ್ಲೂಕಿನ ತಾಳಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮನೆ, ಮಂಜಿನಕಾನು ಗ್ರಾಮಗಳಲ್ಲಿ ಕೆಎಫ್ಡಿ ಪ್ರಕರಣಗಳು ವರದಿಯಾಗುತ್ತಿದ್ದು ಈ ಭಾಗಗಳಲ್ಲಿ ಈಗಾಗಲೇ ವ್ಯಾಪಕ ಮುಂಜಾಗ್ರತಾ ಕ್ರಮ ವಹಿಸಲು ಜನರಿಗೆ ಆರೋಗ್ಯ ಶಿಕ್ಷಣ ಹಾಗೂ ಮಾಹಿತಿ ನೀಡಲಾಗಿದೆ.
ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು :
ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಚಿಕಿತ್ಸೆ:
ಜ್ವರ, ಮೈಕೈ ನೋವು, ತಲೆನೋವು ಕಾಣಿಸಿಕೊಂಡ ತಕ್ಷಣ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು.
ತೋಟ ಅಥವಾ ಕಾಡಿಗೆ ಹೋಗುವ ಮುನ್ನ ಎಚ್ಚರ:
ಕಾಡಿಗೆ ಅಥವಾ ತೋಟಕ್ಕೆ ಹೋಗುವವರು ಕಡ್ಡಾಯವಾಗಿ ಮೈಗೆ ಡಿಪಾ ತೈಲ ಹಚ್ಚಿಕೊಳ್ಳಬೇಕು.
ಅನಗತ್ಯ ಸಂಚಾರಕ್ಕೆ ನಿರ್ಬಂಧ:
ಸಾರ್ವಜನಿಕರು ಸದ್ಯದ ಪರಿಸ್ಥಿತಿಯಲ್ಲಿ ಕಾಡಿಗೆ ಹೋಗುವುದನ್ನು ಹಾಗೂ ಕಾಡಿನ ಒಣ ಎಲೆಗಳನ್ನು (ದರಗು) ಸಂಗ್ರಹಿಸುವುದನ್ನು ನಿಲ್ಲಿಸಬೇಕು.
ಮಂಗಗಳ ಸಾವು ಸಂಭವಿಸಿದರೆ ಮಾಹಿತಿ ನೀಡಿ:
ಕಾಡಿನಲ್ಲಿ ಅಥವಾ ತೋಟಗಳಲ್ಲಿ ಮಂಗಗಳು ಅಸಹಜವಾಗಿ ಮೃತಪಟ್ಟಿರುವುದು ಕಂಡುಬಂದಲ್ಲಿ ತಕ್ಷಣ ಪಶುಸಂಗೋಪನಾ ಇಲಾಖೆ, ಅರಣ್ಯ ಇಲಾಖೆ ಅಥವಾ ಪಂಚಾಯತ್ ರಾಜ್ ಇಲಾಖೆಗೆ ಮಾಹಿತಿ ನೀಡಬೇಕು.
ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ:
ಯಾವುದೇ ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್ಗಳಿಗೆ ಜ್ವರದ ಲಕ್ಷಣವಿರುವ ರೋಗಿಗಳು ಬಂದಲ್ಲಿ, ವೈದ್ಯರು ಅವರಿಗೆ ನೋವು ನಿವಾರಕ ಇಂಜೆಕ್ಷನ್ ಅಥವಾ ಮಾತ್ರೆಗಳನ್ನು ನೀಡಿ ಮನೆಗೆ ಕಳುಹಿಸಬಾರದು. ಬದಲಾಗಿ, ತಕ್ಷಣವೇ ರೋಗಿಯ ಮೊಬೈಲ್ ಸಂಖ್ಯೆಯೊಂದಿಗೆ ಸರ್ಕಾರಿ ಆಸ್ಪತ್ರೆಗೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ, ರಕ್ತ ಪರೀಕ್ಷೆಗೆ ಶಿಫಾರಸು ಮಾಡಬೇಕು.
ಉಚಿತ ಚಿಕಿತ್ಸೆ ಲಭ್ಯ:
ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಎಸ್.ಎ.ಎಸ್.ಟಿ ಅಡಿಯಲ್ಲಿ ನೋಂದಾಯಿತ ಆಸ್ಪತ್ರೆಗಳಲ್ಲಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





