ಹೊಸನಗರ ; ಕರ್ನಾಟಕದ ನಂಬರ್ ಒನ್ ದಿನಪತ್ರಿಕೆ ‘ವಿಜಯ ಕರ್ನಾಟಕ’ ನೇತೃತ್ವದಲ್ಲಿ ಮಲೆನಾಡಿನ ನಡುಮನೆ ಎಂದೇ ಹೆಸರಾಗಿರುವ ಹೊಸನಗರದ ಬಸ್ ನಿಲ್ದಾಣ ಎದುರಿನ ಆರ್ಯ ಈಡಿಗರ ಸಭಾ ಭವನದಲ್ಲಿ ಮೇ 12ರಂದು ಮಂಗಳವಾರ ಬೆಳಗ್ಗೆ 10ಗಂಟೆಗೆ ಜಿಲ್ಲೆಯ ಸಾಧಕ ರೈತರಿಗೆ ‘ವಿಕ ಸೂಪರ್ ಸ್ಟಾರ್ ರೈತ’ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ತೀರ್ಥಹಳ್ಳಿ ಕ್ಷೇತ್ರದ ಶಾಸಕ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಗರ ಕ್ಷೇತ್ರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ವಸ್ತು ಪ್ರದರ್ಶನ ಉದ್ಘಾಟಿಸಲಿದ್ದು, ಡಿಸಿಸಿ ಬ್ಯಾಂಕ್ ಹಾಗೂ ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಆರ್.ಸಿ.ಜಗದೀಶ್ ರೈತರಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಿಮುಲ್ ಅಧ್ಯಕ್ಷ ವಿದ್ಯಾಧರ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ.ಎ.ಬಿ.ಸಂಜಯ್ ಭಾಗವಹಿಸಲಿದ್ದಾರೆ.

ರೈತರ ಜತೆ ಸಂವಾದ :
ಜಿಲ್ಲೆಯಲ್ಲಿ ಸಾವಯವ, ಮಿಶ್ರ ಬೆಳೆ ಸೇರಿದಂತೆ ಇನ್ನಿತರ ಪ್ರಯೋಗಗಳನ್ನು ಮಾಡಿ ಯಶಸ್ವಿಯಾಗಿರುವ ರೈತರ ಜತೆಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ರೈತರು ನೇರವಾಗಿ ಪ್ರಗತಿಪರ ಕೃಷಿಕರ ಜತೆ ಸಂವಾದ ನಡೆಸಿ ಕೃಷಿಯಲ್ಲಿ ಅವರು ಮಾಡಿದ ಸಾಧನೆ, ಕೃಷಿಯನ್ನು ಲಾಭದಾಯಕವಾಗಿ ಪರಿವರ್ತನೆ ಮಾಡಿಕೊಳ್ಳುವ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಬಹುದಾಗಿದೆ. ಅಲ್ಲದೆ ರೈತರಿಗೆ ಆರೋಗ್ಯ ಉಚಿತ ತಪಾಸಣೆ ಮತ್ತು ಕೃಷಿಗೆ ಪೂರಕ ವಸ್ತು ಪ್ರದರ್ಶನ ಆಯೋಜಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





