ಶಿವಮೊಗ್ಗ : ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್ಸಿ ಅಥವಾ ಯಾವುದೇ ಆಸ್ಪತ್ರೆಗೆ ತೆರಳಿ ಶೀಘ್ರ ಚಿಕಿತ್ಸೆ ಪಡೆಯಬೇಕು. ನಾಟಿ ವೈದ್ಯರ ಬಳಿ ತೆರಳಿ ಜೀವಕ್ಕೆ ಆಪತ್ತು ತಂದುಕೊಳ್ಳಬಾರದು. ಹಾವು ಕಡಿತಕ್ಕೆ ನಾಟಿ ಔಷಧಿ ನೀಡುವ ನಾಟಿ ವೈದ್ಯರ ವಿರುದ್ದ ಸೂಕ್ತ ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿ ಅವರು ಮಾತನಾಡಿದರು.
ಡಿಎಸ್ಓ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 226 ಹಾವು ಕಡಿತದ ಪ್ರಕರಣಗಳಿದ್ದು 3 ಸಾವು ಸಂಭವಿಸಿದೆ. ಸಾಗರ ಮತ್ತು ಶಿಕಾರಿಪುರ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ ಎಂದರು.
ಹಾವು ಕಡಿತ ಆಡಿಟ್ ನಡೆಸಿದ ಎಡಿಸಿ, ಹಾವು ಕಡಿತ ಉಂಟಾದ ತಕ್ಷಣದಲ್ಲೇ ಆಸ್ಪತ್ರೆಗೆ ಕರೆತರಬೇಕು. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ನೀಡುವ ಅಗತ್ಯ ಔಷಧಿ ಲಭ್ಯ ಇಟ್ಟುಕೊಳ್ಳಬೇಕು ಹಾಗೂ ಮುನ್ನೆಚ್ಚರಿಕೆ ಹಾಗೂ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಮನೆ ಸುತ್ತಮುತ್ತ ಸ್ವಚ್ಚತೆ ಕಾಪಾಡಕೊಳ್ಳಬೇಕು ಹಾಗೂ ಶಾಲಾ ಆವರಣದಲ್ಲಿ ಅನಗತ್ಯ ಗಿಡ ಗಂಟೆಗಳನ್ನು ಸ್ವಚ್ಚಗೊಳಿಸಬೇಕು ಎಂದು ಸೂಚನೆ ನೀಡಿದರು ಹಾಗೂ ಹಾವು ಕಡಿತಕ್ಕೆ ಯಾವುದೇ ಕಾರಣಕ್ಕೆ ನಾಟಿ ವೈದ್ಯರ ಬಳಿ ತೆರಳದೇ ತತ್ಕ್ಷಣ ಆಸ್ಪತ್ರೆಗೆ ರೋಗಿಯನ್ನು ಕರೆತರಬೇಕು. ಹಾವು ಕಡಿತಕ್ಕೆ ನಾಟಿ ಔಷಧಿ ನೀಡುವ ವೈದ್ಯರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆರ್ಸಿಹೆಚ್ ಅಧಿಕಾರಿಗಳಿಗೆ ಸೂಚಿಸಿದರು.
ಕೆಎಫ್ಡಿ :
ಡಾ.ನಾಗರಾಜ್ ನಾಯ್ಕ್, ಜಿಲ್ಲೆಯಲ್ಲಿ ಈವರೆಗೆ ಕೆಎಫ್ಡಿ 123 ಪಾಸಿಟಿವ್ ಪ್ರಕರಣಗಳಿದು, ಚಿಕಿತ್ಸೆ ನಡೆಸಲಾಗುತ್ತಿದೆ. ಒಟ್ಟು 5 ಸಾವು ಸಂಭವಿಸಿದೆ. ಟಿಕ್ ಮಾದರಿ ಪರೀಕ್ಷೆ ನಡೆಸಲಾಗುತ್ತಿದ್ದು ಈವರೆಗೆ 625 ಮಾದರಿಯನ್ನು ಪುಣೆಗೆ ಕಳುಹಿಸಲಾಗಿದೆ ಅದರಲ್ಲಿ 3 ಟಿಕ್ ಪೂಲ್ ಪಾಸಿಟಿವ್ ಬಂದಿದೆ. ಈವರೆಗೆ 147 ಮಂಗಗಳು ಸಾವನ್ನಪ್ಪಿದ್ದು ಇದರಲ್ಲಿ 34 ಅಟಾಪ್ಸಿ ನಡೆಸಲಾಗಿದ್ದು, ಯಾವುದೇ ಪಾಸಿಟಿವ್ ಪ್ರಕರಣ ಬಂದಿಲ್ಲ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳು, ಕೆಎಫ್ಡಿ ಗೆ ಕಾರಣವಾಗುವ ಉಣ್ಣೆ ಕಡಿತದಿಂದ ರಕ್ಷಣೆ ಪಡೆಯಲು ತೀರ್ಥಹಳ್ಳಿ, ಹೊಸನಗರ, ಸಾಗರ ಭಾಗದಲ್ಲಿ ಡೇಪಾ ಎಣ್ಣೆಯನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು. ಇಲ್ಲಿನ ಮಕ್ಕಳು ಶಾಲೆಗೆ ಮತ್ತು ಹೊರಗೆ ಹೋಗುವಾಗ ಡೇಪಾ ಎಣ್ಣೆ, ಸಾಕ್ಸ್ ಧರಿಸಿಕೊಂಡು ಹೋಗಬೇಕು. ಜ್ವರ ಲಕ್ಷಣಗಳಿದ್ದರೆ ತಕ್ಷಣ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ಒಳಪಡಿಸಬೇಕು ಎಂದು ಎಚ್ಚರಿಕೆ ನೀಡಬೇಕು ಎಂದರು.
ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ:
ಜಿಲ್ಲೆಯಲ್ಲಿ ಈ ತಿಂಗಳು 2254 ನಾಯಿ ಕಡಿತ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಈವರೆಗೆ 8140 ನಾಯಿ ಕಡಿತ ಪ್ರಕರಣ ದಾಖಲಾಗಿದೆ. ಯಾವುದೇ ಸಾವು ಸಂಭವಿಸಿಲ್ಲ. ನಾಯಿ ಕಡಿತ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡುವ ಪ್ರಕ್ರಿಯೆಯನ್ನು ಪರಿಣಾಮಕಾರಿಗೊಳಿಸಬೇಕು. ಹೋಟೆಲ್, ದರ್ಶಿನಿಗಳು ಛತ್ರಗಳು, ಶಾಲೆಗಳು, ಹಾಸ್ಟೆಲ್ ಗಳಲ್ಲಿ ಆಹಾರ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಹಾಗೂ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಆಹಾರ ಪದಾರ್ಥ ಹಾಕಬಾರದು.
ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲು ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾವು ಕಡಿತದ ಔಷಧಿ ದಾಸ್ತಾನು ಲಭ್ಯವಿರುವಂತೆ ಕ್ರಮ ವಹಿಸುವಂತೆ ಸೂಚಿಸಿದರು.
ಕಾಲರ, ಟೈಫಾಯ್ಡ್, ಟಿಬಿ, ಕ್ಷಯ ಇತರೆ ಹರಡುವ ಖಾಯಿಲೆಗಳನ್ನು ನಿಯಂತ್ರಣದಲ್ಲಿಡಲು ಜಿಲ್ಲೆಯಲ್ಲಿ ಶುದ್ದ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸುವಂತೆ ಕ್ರಮ ವಹಿಸುವದನ್ನು ಖಾತ್ರಿಪಡಿಸಿಕೊಳ್ಳಬೇಕು. ಕುಡಿಯುವ ನೀರಿನ ಪೈಪ್ ಲೈನ್ ಲೀಕೇಜ್ ಇದ್ರೆ ಗ್ರಾಮ ಪಂಚಾಯ್ತಿಗೆ ಮಾಹಿತಿ ನೀಡಬೇಕು. ಶಾಲೆಗಳು, ಹಾಸ್ಟೆಲ್ಗಳಲ್ಲಿ ನೀರಿನ ಮಾದರಿಯ ಪರೀಕ್ಷೆಯನ್ನು ನಿಯಮಿತವಾಗಿ ಮಾಡಿಸಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಗುಡದಪ್ಪ ಕಸಬಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಈವರೆಗೆ 1682 ಪರೀಕ್ಷೆ ನಡೆದಿದ್ದು 42 ಪಾಸಿಟಿವ್ ಪ್ರಕರಣ ದಾಖಲಾಗಿ ಚಿಕಿತ್ಸೆ ನಡೆಯುತ್ತಿದೆ. ಮಲೇರಿಯಾ 5 ಪ್ರಕರಣ ದಾಖಲಾಗಿದ್ದು. ಚಿಕಿತ್ಸೆ ನೀಡಲಾಗುತ್ತಿದೆ.
ಈವರೆಗೆ ಮುಂಗಾರು ಪೂರ್ವ ಮತ್ತು ಮುಂಗಾರು ಅವಧಿಯಲ್ಲಿ ಹೆಚ್ಚಾಗುವ ಈಡಿಸ್ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಿ, ಡೆಂಗಿ ಜ್ವರ ಹರಡದಂತೆ ನಿಯಂತ್ರಿಸಲು ಕರ್ನಾಟಕ ಸರ್ಕಾರವು ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.
ಶುಕ್ರವಾರ – ಮೂಲ ಉತ್ಪತ್ತಿ ನಾಶ ದಿನ:
ಪ್ರತಿ ಶುಕ್ರವಾರದಂದು ಈಡಿಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗುವ ತಾಣಗಳನ್ನು ನಾಶಪಡಿಸುವ ಚಟುವಟಿಕೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳಲಾಗುವುದು. ಎಲ್ಲಾ ಆರೋಗ್ಯ ಸಂಸ್ಥೆಗಳು, ಆಸ್ಪತ್ರೆಗಳು ಹಾಗೂ ಶಾಲಾ-ಕಾಲೇಜುಗಳು ಮತ್ತು ಅಂಗನವಾಡಿಗಳ ಒಳಾಂಗಣ ಮತ್ತು ಹೊರಾಂಗಣಗಳನ್ನು ಪರಿಶೀಲಿಸಿ ಸೊಳ್ಳೆ ಮುಕ್ತ ವಲಯವನ್ನಾಗಿ ಮಾಡಲು ಸೂಚನೆ ನೀಡಿದ್ದು ಎಲ್ಲರೂ ಸಹಕರಿಸಬೇಕೆಂದರು.
ಅಪರ ಜಿಲ್ಲಾಧಿಕಾರಿಗಳು ಮಾತನಾಡಿ, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕ್ಷೇತ್ರ ಭೇಟಿಯ ಸಮಯದಲ್ಲಿ ನಿಗದಿತ ಮನೆಗಳಲ್ಲಿ ಲಾರ್ವಾ ಸಮೀಕ್ಷೆ ಹಾಗೂ ನಾಶಪಡಿಸುವ ಕಾರ್ಯವನ್ನು ಮುಂದುವರಿಸಬೇಕು. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶುಕ್ರವಾರದಂದು ನಗರ ಪ್ರದೇಶಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾರ್ವಾ ನಾಶ ಚಟುವಟಿಕೆಗಳನ್ನು ಮುಂದುವರಿಸುವುದು. ಇದರಲ್ಲಿ ಪ್ರಮುಖವಾಗಿ ಹೈ-ರಿಸ್ಕ್ ಪ್ರದೇಶಗಳು, ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ನಿರ್ಮಾಣ ಹಂತದ ಕಟ್ಟಡಗಳ ಸ್ಥಳಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ವಾತಾವರಣ ಬದಲಾವಣೆ, ತ್ವರಿತ ನಗರೀಕರಣ ಮತ್ತು ಘನತ್ಯಾಜ್ಯಗಳ ಅಸಮರ್ಪಕ ವಿಲೇವಾರಿಯಿಂದಾಗಿ ಸೊಳ್ಳೆಗಳು ಹೆಚ್ಚುತ್ತಿದ್ದು, ಇದನ್ನು ತಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಸಾರ್ವಜನಿಕರೊಂದಿಗೆ ಕೈಜೋಡಿಸಿ ಬಹುಮುಖಿ ವಿಧಾನದ ಮೂಲಕ ಡೆಂಗಿ ನಿಯಂತ್ರಣ ಸಾಧಿಸಲು ಸರ್ಕಾರ ಸೂಚಿಸಿದೆ.
ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಹಾಸ್ಟೆಲ್, ರೈಲ್ವೇ ಸ್ಟೇಷನ್, ಬಸ್ ಸ್ಟ್ಯಾಂಡ್, ಟೆರೇಸ್, ಟೈರುಗಳು, ಹೀಗೆ ನೀರು ಸಂಗ್ರಹವಾಗುವ ಜಾಗ ಪತ್ತೆ ಹಚ್ಚಿ, ನೀರನ್ನು ತೆಗೆಸು ಹಾಕಿ, ನೀರು ನಿಲ್ಲದಂತೆ
ಪರಿಶೀಲಿಸಿ ಕ್ರಮ ವಹಿಸಬೇಕು ಹಾಗೂ ಎಲ್ಲ ಕಚೇರಿಗಳಲ್ಲಿ ಕಚೇರಿ ಸುತ್ತಮುತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು ಸೂಚನೆ ನೀಡಿದ ಅವರು ಅಗತ್ಯವಿರುವೆಡೆ ಟೆಮಿಫಾಸ್ ಸಿಂಪಡಣೆ, ಫಾಗಿಂಗ್ ಮಾಡಲು ತಿಳಿಸಿದರು.
ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ ಮಾತನಾಡಿ, 14 ರಿಂದ 15 ವರ್ಷದೊಳಗಿನ ಎಲ್ಲ ವಿದ್ಯಾರ್ಥಿನಿಯರಿಗೆ ಹೆಚ್ಪಿವಿ ಲಸಿಕೆ ಹಾಕಿಸಬೇಕು. ವಿದ್ಯಾರ್ಥಿನಿಯರು ತಮ್ಮ ಹತ್ತಿರದ ಪಿಹೆಚ್ಸಿ, ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಈ ಲಸಿಕೆ ಹಾಕಿಸಿಕೊಳ್ಳಬೇಕು. ಇದರಿಂದ ಗರ್ಭಗೊರಳಿನ ಕ್ಯಾನ್ಸರ್ನ್ನು ತಡೆಗಟ್ಟಬಹುದಾಗದಿದು, ಎಲ್ಲ ಪ್ರೌಢಶಾಲೆಗಳಲ್ಲಿ ಈ ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಶಿಕ್ಷಕರು ತಿಳಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ಡಿಹೆಚ್ಓ ಡಾ.ನಟರಾಜ್, ಆರ್ ಸಿ ಹೆಚ್ ಓ ಡಾ. ಮಲ್ಲಪ್ಪ, ಇತರೆ ಕಾರ್ಯಕ್ರಮಗಳ ಅನುಷ್ಟಾನ ಅಧಿಕಾರಿಗಳು, ಟಿಹೆಚ್ಓಗಳು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





