ತೀರ್ಥಹಳ್ಳಿ : ತಾಲ್ಲೂಕಿನ ಹಾದಿಗಲ್ಲು ಸಮೀಪದ ಕರಡಿಗ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವು ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಆರು ಜನರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ ?
ಕರಡಿಗ ನಿವಾಸಿ ಅಮೂಲ್ಯ ನೀಡಿದ ದೂರಿನಲ್ಲಿ ಮೇ 27ರಂದು ಬೆಳಿಗ್ಗೆ 8.15ರ ಸುಮಾರಿಗೆ ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ಬಗ್ಗೆ ಪ್ರಶ್ನೆ ಎತ್ತಿದಾಗ ಹಳೆಯ ದ್ವೇಷವನ್ನು ಮುಂದಿಟ್ಟುಕೊಂಡು ಆರೋಪಿಗಳು ಜಗಳಕ್ಕೆ ಮುಂದಾಗಿರುವುದಾಗಿ ತಿಳಿದುಬಂದಿದೆ.
ಮಂಜುನಾಥ್, ಚಂದ್ರಶೇಖರ, ಜಯಮ್ಮ, ಲೋಲಮ್ಮ, ಸೀಮಾ ಮತ್ತು ಚಂದ್ರಶೇಖರ್ ಎಂಬ ಆರೋಪಿಗಳ ಗುಂಪು ಅಮೂಲ್ಯ ಮತ್ತು ಅವರ ಪತಿ ಶಿವಶಂಕರ್ ಮೇಲೆ ದೌರ್ಜನ್ಯ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯಲ್ಲಿ ದಂಪತಿಯ ಮೇಲೆ ಮೈತುಂಬಾ ರಕ್ತಸಿಕ್ತ ಗಾಯಗಳಾಗಿದ್ದು ಹಲ್ಲೆಯ ತೀವ್ರತೆಯಿಂದ ಶಿವಶಂಕರರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದು, ಆರೋಪಿಗಳು ಮುಂದಿನ ದಿನಗಳಲ್ಲಿ ಕೊಲೆ ಬೆದರಿಕೆ ನೀಡಿದ್ದಾರೆಯೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸ್ಥಳೀಯರು ಗಾಯಾಳು ದಂಪತಿಯನ್ನು ತಕ್ಷಣ ಆಸ್ಪತ್ರೆಗೆ ತರಲು ಸಹಾಯ ಮಾಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್ಗಳಡಿ—189(2), 189(4), 191(2), 191(3), 126(2), 352, 74, 115(2), 118(1), 351(2), 190—ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಚುರುಕುಗೊಂಡಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





