ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರದ ಹಿರಿಯ ನಾಯಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯ ಸಚಿವ ಸ್ಥಾನ ನೀಡಬೇಕು ಎಂದು ಸಾಗರದ ಪ್ರಮುಖ ಮುಖಂಡರು ಮತ್ತು ಅವರ ಗೆಳೆಯರ ಬಳಗವು ಪ್ರಬಲವಾಗಿ ಆಗ್ರಹಿಸಿದ್ದು, ಜೊತೆಗೆ ಮಧು ಬಂಗಾರಪ್ಪ ಅವರ ಸಚಿವ ಸ್ಥಾನವನ್ನು ಮುಂದುವರಿಸುವುದಕ್ಕೂ ಬೆಂಬಲ ವ್ಯಕ್ತಪಡಿಸಲಾಯಿತು.
ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜಿ.ಪಂ ಮಾಜಿ ಸದಸ್ಯ ಬಿ.ಆರ್. ಜಯಂತ್, ಗೋಪಾಲಕೃಷ್ಣ ಬೇಳೂರು ಮೂರೂ ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ವಿಶಿಷ್ಟ ಜನಮನ್ನಣೆ ಪಡೆದಿರುವುದಾಗಿ ಹೇಳಿದರು. ಅವರು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಬಲಿಷ್ಠ ನಾಯಕತ್ವವನ್ನು ತೋರಿಸಿದ್ದು, ಮಲೆನಾಡಿನ ವಿವಿಧ ಸಮಸ್ಯೆಗಳಿಗೆ ಬೇಳೂರು ಅವರ ನೇತೃತ್ವ ಅತ್ಯಾವಶ್ಯಕವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನವನ್ನು ಹೊಂದಿರುವಾಗ, ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಬಲಿಷ್ಠವಾಗಲಿದೆ ಎಂಬ ವಿಶ್ವಾಸವಿದೆ. ಈ ಹಿನ್ನೆಲೆಗಳಲ್ಲಿ, ಸಾಗರ ಭಾಗಕ್ಕೂ ಆದ್ಯತೆ ನೀಡುವ ಮೂಲಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಜಿ.ಪಂ. ಮಾಜಿ ಸದಸ್ಯೆ ಅನಿತಾ ಕುಮಾರಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಭದ್ರಕೋಟೆಯಾಗಿ ಕಟ್ಟಿಕೊಳ್ಳಲು ಬೇಳೂರು ಅವರ ನಾಯಕತ್ವ ಅತ್ಯಂತ ಮುಖ್ಯವಾಗಿದೆ. ಅವರು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾಗಲೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದರು. ಮುಂದಿನ ಸ್ಥಳೀಯ ಸಂಸ್ಥೆಗಳ ಮತ್ತು 2028ರ ವಿಧಾನಸಭಾ ಚುನಾವಣೆಗಳನ್ನು ಸಮರ್ಥವಾಗಿ ನಡೆಸುವ ಶಕ್ತಿಯು ಬೇಳೂರು ಅವರಿಗೆ ಇದೆ. ಆದ್ದರಿಂದ ಅವರನ್ನು ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಮಾತನಾಡಿ, ಸಾಗರ ಮತ್ತು ಹೊಸನಗರ ತಾಲ್ಲೂಕುಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲು ಬೇಳೂರು ಅವರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿ, ಅವರು ಹಿಂದುಳಿದ ವರ್ಗಗಳ ನಾಯಕತ್ವ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ವ್ಯಕ್ತಿ. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಅವರ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಇಂದೂಧರ, ಸೋಮಶೇಖರ್, ಗಣಪತಿ, ಅಶೋಕ್ ಬೇಳೂರು, ಚಂದ್ರಪ್ಪ, ಸುರೇಶ್ ಬಾಬು, ರವಿಗೌಡ, ಚಿದಂಬರ್, ವೀರೇಶ್ ಗೌಡ, ಸತ್ಯನಾರಾಯಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





