ಶಿವಮೊಗ್ಗ ; ಉತ್ತರ ಕನ್ನಡದಲ್ಲಿ ಮಳೆಯ ಸಕ್ರಿಯತೆಯ ನಡುವೆ, ಜೋಗ ಜಲಪಾತದ ಸಮೀಪದ ರಾಜಾ ಫಾಲ್ಸ್ನಲ್ಲಿ ಪ್ರವಾಸಿಗರ ಅಕ್ರಮ ಪ್ರವೇಶ ಮತ್ತು ಅಪಾಯಕಾರಿ ಸ್ಥಳದಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ಮೂವರ ವಿರುದ್ಧ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರಾಜಾ ಫಾಲ್ಸ್ನ ನಿರ್ಬಂಧಿತ ವಲಯವಾಗಿರುವ ಅಪಾಯಕಾರಿ ಕಲ್ಲು ತುದಿಯಲ್ಲಿ ನಿಂತು ವಿಡಿಯೋ ಮಾಡಿ ಅದನ್ನು Mister Kannadiga ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಈ ಯುವಕರು ಇತರ ಪ್ರವಾಸಿಗರಿಗೂ ಈ ರೀತಿಯ ಅಪಾಯಕಾರಿ ಸ್ಥಳಗಳಿಗೆ ಹೋಗಲು ಪ್ರೇರಣೆ ನೀಡಿರುವುದು ಆರೋಪವಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಜೋಗಿನಕೊಪ್ಪ ಮೂಲದ ಮೋಹನ ಶುಭಕರ ಗೌಡ (26), ಭರತ ಗೌಡ (27) ಮತ್ತು ಮದನ್ ಗೌಡ ಎಂಬ ಮೂವರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಳೆಗಾಲದಲ್ಲಿ ಜಲಪಾತಗಳ ಸುತ್ತಲೂ ಇರುವ ಕಲ್ಲುಗಳು ಅತ್ಯಂತ ನುಣುಪು ಹಾಗೂ ಅಸ್ಥಿರವಾಗಿದ್ದು, ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಅಪಾಯಕಾರಿಯಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಪ್ರವಾಸಿಗರು ಈ ಕಾರಣಕ್ಕೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಪ್ಪಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಪ್ರತಿ ವರ್ಷ ಮಳೆಗಾಲದಲ್ಲಿ ಜೋಗ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇಂತಹ ವಿಡಿಯೋಗಳು ಇತರರಿಗೆ ತಪ್ಪಾದ ದಾರಿ ತೋರಿಸುವ ಸಾಧ್ಯತೆ ಇರುವುದರಿಂದ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ತಪ್ಪಿಸುವಲ್ಲಿ ನಿರಂತರ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





