ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿ : ಅನ್ನಪೂರ್ಣ

Written by Mahesha Hindlemane

Published on:

ಹೊಸನಗರ : ಮಲೆನಾಡಿನಲ್ಲಿ ಜೂನ್ ತಿಂಗಳಿಂದ ಮಳೆಗಾಲ ಪ್ರಾರಂಭವಾಗಬೇಕಾಗಿದ್ದು ಮಳೆಯಿಲ್ಲದೇ ಹೊಸನಗರ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಂಭವವಿದ್ದು ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಶಿವಮೊಗ್ಗ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅನ್ನಪೂರ್ಣ ಪಿಡಿಒಗಳಿಗೆ ಸೂಚಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಹೊಸನಗರ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿ ಪಿಡಿಒಗಳು ಈ ವರ್ಷ ಎಚ್ಚರಿಕೆಯಿಂದ ಇರಬೇಕು. ನೀವು ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗುವ ಸಂಭವವಿದೆೆಂದರು.

ಯಾವುದೇ ಸಮಸ್ಯೆಯಿದ್ದರೂ ಟಾಸ್ಕ್ ಫೋರ್ಸ್ ಸಮಿತಿ ಗಮನಕ್ಕೆ ತನ್ನಿ :

ರಾಜ್ಯದಲ್ಲಿ ಬರದ ಛಾಯೆ ದಟ್ಟವಾಗಿದೆ. ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾಧಿಕಾರಿಗಳಿಗೆ ತಾಲ್ಲೂಕಿನ ಸಮಸ್ಯೆಗಳ ಬಗ್ಗೆ ವರದಿ ಸಲ್ಲಿಸುವಂತೆ ಈಗಾಗಲೇ ಸೂಚಿಸಿದ್ದಾರೆ. ಅದರಂತೆ ನಾವು ವರದಿ ನಿಡಬೇಕಾಗಿದೆ. ನಿಮ್ಮ ಗ್ರಾಮದಲ್ಲಿ ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಟಾಸ್ಕ್ ಫೋರ್ಸ್ ಸಮಿತಿಯ ಮುಂದೆ ತಂದರೆ ಅನುಕೂಲವಾಗಲಿದ್ದು ಇಲ್ಲವಾದರೆ ಕೊನೆಯ ಘಳಿಗೆಯಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ತೊಂದರೆಯ ಜವಾಬ್ದಾರಿ ಗ್ರಾಮ ಪಂಚಾಯತಿಯ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದರು.

ಎಲ್ಲಾ ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ವಾಸವಿರಬೇಕು :

ಆಯಾಯ ಗ್ರಾಮ ಪಂಚಾಯತಿಯ ಪಿಡಿಒಗಳು ಮತ್ತು ಗ್ರಾಮ ಲೆಕ್ಕಾಧಿಕಾರಿ ಆಯಾಯ ಗ್ರಾಮದಲ್ಲಿ ವಾಸವಿದ್ದು ಸಾರ್ವಜನಿಕರ ಗ್ರಾಮಸ್ಥರಿಗೆ ಯಾವುದೇ ತೊಂದರೆಯಾದರೂ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಎಚ್ಚರಿಸಿದರು.

ಮನೆ ಹಾನಿಯಾದರೆ 24 ಗಂಟೆಯಲ್ಲಿ ವರದಿ ನೀಡಬೇಕು :

ಅತೀವೃಷ್ಠಿ ಅಥವಾ ಮನೆಗಳ ಮೇಲೆ ಮರ ಬಿದ್ದು ಹಾನಿಯಾದರೆ 24 ಗಂಟೆಯ ಒಳಗೆ ಮೇಲಾಧಿಕಾರಿಗಳಿಗೆ ವರದಿ ನೀಡಬೇಕು ಎಂದರು.

ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸಿ :

ಹೊಸನಗರ ತಾಲ್ಲೂಕಿನಲ್ಲಿ ಸಾಕಷ್ಟು ಮಕ್ಕಳು ಶಾಲೆ ಬಿಟ್ಟಿರುವ ವರದಿಗಳಾಗಿದ್ದು ಶಾಲೆ ಬಿಟ್ಟ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಪ್ರೇರೆಪಿಸಬೇಕು ಎಂದು ಪಿಡಿಒಗಳಿಗೆ ಆದೇಶಿಸಿದರು.

ಮಳೆ ಮಾಪನ ಕೇಂದ್ರಗಳನ್ನು ಸರಿಪಡಿಸಿಕೊಳ್ಳಿ :

ಹೊಸನಗರ ತಾಲ್ಲೂಕಿನಲ್ಲಿ 30 ಗ್ರಾಮ ಪಂಚಾಯತಿಗಳಿದ್ದು 29 ಮಳೆಮಾಪನಗಳನ್ನು ಸರಿಯಾಗಿದೆಯೇ ಎಂದು ಪರೀಕ್ಷಿಸಿಕೊಂಡು ಸರಿಯಾಗದಿದ್ದರೆ ಸರಿಪಡಿಸಿಕೊಳ್ಳಿ ಎಂದರು.

ಈ ಸಭೆಯಲ್ಲಿ ಹೊಸನಗರ ತಾಲ್ಲೂಕು ತಹಸೀಲ್ದಾರ್ ಭರತ್‌ರಾಜ್ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಪವನ್‌ಕುಮಾರ್, ಮಂಜುನಾಥ್ ತಾಲ್ಲೂಕಿನ ಎಲ್ಲ ಅಧಿಕಾರಿಗಳು, ಪಿಡಿಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಭಾಗವಹಿಸಿದ್ದರು.

Leave a Comment