ಶಿವಮೊಗ್ಗ: ವಿಮಾನ ಟಿಕೆಟ್ ಬುಕಿಂಗ್ ಮಾಡಿಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಒಟ್ಟು ₹11.09 ಲಕ್ಷ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೈವೇಟ್ ಲಿಮಿಟೆಡ್ ಕಂಪನಿಯ ಹೆಸರಿನಲ್ಲಿ ಸಂಪರ್ಕಿಸಿದ ವಂಚಕರು, ವಿಮಾನ ಟಿಕೆಟ್ ಬುಕಿಂಗ್ ಸೇವೆ ನೀಡುವುದಾಗಿ ಉದ್ಯಮಿಯನ್ನು ನಂಬಿಸಿದ್ದರು. ಈ ವೇಳೆ ಅವರ ವೈಯಕ್ತಿಕ ಮಾಹಿತಿಯನ್ನು ಪಡೆದುಕೊಂಡು, ರಿಜಿಸ್ಟ್ರೇಷನ್ ಶುಲ್ಕ ಸೇರಿದಂತೆ ವಿವಿಧ ಕಾರಣಗಳನ್ನು ಮುಂದಿಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜೂನ್ 17ರಿಂದ ಜೂನ್ 20ರವರೆಗೆ ಉದ್ಯಮಿ, ಅವರ ಪತ್ನಿ ಹಾಗೂ ಪುತ್ರನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು ₹11,09,000 ಹಣ ವರ್ಗಾಯಿಸಿಕೊಂಡಿದ್ದಾರೆ ಎನ್ನಲಾಗಿದೆ.
ಹಣ ಪಾವತಿಸಿದ ಬಳಿಕವೂ ವಿಮಾನ ಟಿಕೆಟ್ ನೀಡದೆ ವಂಚಕರು ಸಬೂಬು ಹೇಳುತ್ತಿದ್ದರು. ಉದ್ಯಮಿ ಹಣ ವಾಪಸ್ ನೀಡುವಂತೆ ಕೇಳಿದಾಗ, ಹೆಚ್ಚುವರಿ ಹಣ ಸೇರಿಸಿ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದರು. ಆದರೆ ನಂತರ ಹಣ ಮರಳಿಸದ ಹಿನ್ನೆಲೆಯಲ್ಲಿ ತಾವು ವಂಚನೆಗೆ ಒಳಗಾಗಿರುವುದು ಉದ್ಯಮಿಗೆ ತಿಳಿದುಬಂದಿದೆ.
ಈ ಕುರಿತು ನೀಡಲಾದ ದೂರಿನ ಆಧಾರದ ಮೇಲೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.