ಶಿವಮೊಗ್ಗ

ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ; ಮುಂಭಾಗದ ಗಾಜು ಒಡೆದು ₹20 ಸಾವಿರ ನಷ್ಟ

ಶಿವಮೊಗ್ಗ: ಶಿವಮೊಗ್ಗ–ಹೊನ್ನಾಳಿ ರಸ್ತೆಯ ತ್ಯಾವರೆಚಟ್ನಳ್ಳಿ ಬಳಿಯ ಪೆಟ್ರೋಲ್ ಬಂಕ್ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ವ್ಯಕ್ತಿಯೊಬ್ಬ ಕಲ್ಲು ತೂರಿದ ಘಟನೆ ನಡೆದಿದೆ. ಕಲ್ಲು ಬಡಿದ ಪರಿಣಾಮ ಬಸ್ಸಿನ ಮುಂಭಾಗದ ಗಾಜು ಬಿರುಕು ಬಿಟ್ಟಿದ್ದು, ಸುಮಾರು ₹20 ಸಾವಿರ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹುಬ್ಬಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ತ್ಯಾವರೆಚಟ್ನಳ್ಳಿ ಬಳಿ ಸಾಗುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಶಿವಮೊಗ್ಗದ ರಾಗಿಗುಡ್ಡ ನಿವಾಸಿ ಪವನ್ ಎಂಬಾತ ಏಕಾಏಕಿ ಬಸ್‌ನತ್ತ ಕಲ್ಲು ಎಸೆದಿದ್ದಾನೆ ಎನ್ನಲಾಗಿದೆ.

ಕಲ್ಲು ಬಡಿದ ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದು, ಚಾಲಕ ಮತ್ತು ನಿರ್ವಾಹಕರು ಆತನನ್ನು ಹಿಡಿದು ವಿಚಾರಿಸಿದ್ದಾರೆ. ಈ ವೇಳೆ ಆತ ಚಾಲಕ ಹಾಗೂ ನಿರ್ವಾಹಕರಿಗೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಸ್ ಚಾಲಕ ಶಂಕರಪ್ಪ ನೀಡಿದ ದೂರಿನ ಆಧಾರದ ಮೇಲೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Comment