ಸಾಗರ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ

ಸಾಗರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಜೊತೆಗೆ ಪಕ್ಷ ಹಾಗೂ ಸರ್ಕಾರದ ವಿವಿಧ ಸಮಿತಿಗಳಲ್ಲಿರುವ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ.

ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಂಬಲಿಗರಿಗೆ ಸಂಪುಟದ ಪಟ್ಟಿ ನಿರಾಸೆ ಮೂಡಿಸಿದೆ. ಇದರ ವಿರುದ್ಧ ಸಾಗರದ ಜಂಬಗಾರು ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಟೈರ್‌ಗೆ ಬೆಂಕಿ ಹಚ್ಚಿ ಪಕ್ಷದ ವರಿಷ್ಠರ ವಿರುದ್ಧ ಘೋಷಣೆ ಕೂಗಿದ್ದರು.

ಬೇಳೂರು ಅವರು ಕ್ಷೇತ್ರದ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಗಾಗಿ ನಿರಂತರವಾಗಿ ಶ್ರಮಿಸಿದ್ದರೂ ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪಕ್ಷದ ಹೈಕಮಾಂಡ್ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

mt saf

ಗ್ಯಾರಂಟಿ ಯೋಜನಾ ಸಮಿತಿ ಸದಸ್ಯ ರಾಜೀನಾಮೆ

ಬೇಳೂರು ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ, ಅವರ ಕಟ್ಟಾ ಅಭಿಮಾನಿ ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೆನೆ ಎಂದು ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ ತಿಳಿಸಿದ್ದಾರೆ.

nagsf
ರವೀಂದ್ರ ಕೆರೆಹಳ್ಳಿ

ಪಕ್ಷದ ನಿರ್ಧಾರದಿಂದ ಕ್ಷೇತ್ರದ ಕಾರ್ಯಕರ್ತರು ಮತ್ತು ಬೇಳೂರು ಬೆಂಬಲಿಗರಿಗೆ ತೀವ್ರ ನೋವಾಗಿದೆ. ತಮ್ಮ ಅಸಮಾಧಾನವನ್ನು ಪಕ್ಷದ ವರಿಷ್ಠರಿಗೆ ತಲುಪಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನಾ ಸಮಿತಿಯ ಹುದ್ದೆ ತ್ಯಜಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ

nagodis
ನಾಗೋಡಿ ವಿಶ್ವನಾಥ್

ಇದರ ಮಧ್ಯೆ, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ನಾಗೋಡಿ ವಿಶ್ವನಾಥ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಆಗಸ್ಟ್ 3ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿರುವ ಪತ್ರದಲ್ಲಿ, ಸಚಿವ ಸಂಪುಟ ವಿಸ್ತರಣೆಯಲ್ಲಿ ಗೋಪಾಲಕೃಷ್ಣ ಬೇಳೂರು ಅವರಿಗೆ ಸ್ಥಾನ ನೀಡದಿರುವುದರಿಂದ ಕ್ಷೇತ್ರದ ಜನರು, ರೈತರು ಮತ್ತು ಕಾರ್ಯಕರ್ತರಿಗೆ ನಿರಾಸೆಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಬೇಳೂರು ಅವರಿಗೆ ಸಚಿವ ಸ್ಥಾನ ದೊರೆತಿದ್ದರೆ ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಅವಕಾಶ ಸಿಗುತ್ತಿತ್ತು. ಪಕ್ಷದ ನಿರ್ಧಾರದಿಂದ ಮನನೊಂದು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ನಿಟ್ಟೂರು ಭಾಗದ ಹಲವು ಮುಖಂಡರಿಂದ ಹುದ್ದೆ ತ್ಯಾಗ

ನಿಟ್ಟೂರು ಕಾಂಗ್ರೆಸ್ ಘಟಕದ ಅಧ್ಯಕ್ಷರು ಹಾಗೂ ಕೆಡಿಪಿ ಸದಸ್ಯರಾದ ನಾಗೇಂದ್ರ ಜೋಗಿ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಲಾಗಿದೆ.

nagendra jogi
ನಾಗೇಂದ್ರ ಜೋಗಿ

ಇವರ ಜೊತೆಗೆ ಕೆಳಗಿನ ಮುಖಂಡರೂ ಪಕ್ಷದ ಹುದ್ದೆಗಳು ಮತ್ತು ನಾಮನಿರ್ದೇಶಿತ ಸದಸ್ಯತ್ವಗಳಿಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ:

  • ನಿಟ್ಟೂರು ಕಾಲೇಜು ಅಭಿವೃದ್ಧಿ ಸಮಿತಿಯ ಮಾಜಿ ಉಪಾಧ್ಯಕ್ಷ ಹಾಗೂ ನಿಟ್ಟೂರು ಬೂತ್ ಸಮಿತಿ ಅಧ್ಯಕ್ಷ ಜಿ.ವಿ. ಸುಬ್ರಮಣ್ಯ
  • ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಚಂದಯ್ಯ ಜೈನ್
  • ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ನರಸಿಂಹ ಪೂಜಾರಿ

ಇವರು ತಮ್ಮ ಪಕ್ಷದ ಹುದ್ದೆಗಳು ಹಾಗೂ ನಾಮನಿರ್ದೇಶಿತ ಸದಸ್ಯತ್ವಗಳನ್ನು ತ್ಯಜಿಸಿರುವುದಾಗಿ ಬೆಂಬಲಿಗರು ತಿಳಿಸಿದ್ದಾರೆ.

ಸಾಗರ ಕಾಂಗ್ರೆಸ್‌ಗೆ ಹೊಸ ಸವಾಲು

ಪ್ರತಿಭಟನೆ, ಗ್ಯಾರಂಟಿ ಯೋಜನಾ ಸಮಿತಿ ಸದಸ್ಯರ ರಾಜೀನಾಮೆ ಮತ್ತು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರ ರಾಜೀನಾಮೆಯಿಂದ ಸಾಗರ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮತ್ತಷ್ಟು ಬಹಿರಂಗವಾಗಿದೆ.

ಗೋಪಾಲಕೃಷ್ಣ ಬೇಳೂರು ಅವರ ಮುಂದಿನ ನಿರ್ಧಾರ ಹಾಗೂ ಬೆಂಬಲಿಗರ ಸಾಮೂಹಿಕ ರಾಜೀನಾಮೆಗೆ ಪಕ್ಷದ ವರಿಷ್ಠರು ನೀಡುವ ಪ್ರತಿಕ್ರಿಯೆ ಈಗ ಕುತೂಹಲ ಮೂಡಿಸಿದೆ.

Leave a Comment