N.R.PURA | ಜ್ಞಾನ ಕ್ರಿಯಾತ್ಮಕ ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ಸಾಮರಸ್ಯ ನೆಲೆಸಲು ಸಾಧ್ಯ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸತ್ಯದ ತಳಹದಿಯ ಮೇಲೆ ಸೈದ್ಧಾಂತಿಕ ನಿಲುವನ್ನು ಗಟ್ಟಿಗೊಳಿಸಿಕೊಳ್ಳಬೇಕೆಂದು
ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಶ್ರೀ ರಂಭಾಪುರಿ ಪೀಠದ ಸಭಾಂಗಣದಲ್ಲಿ ಜರುಗಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿಕ್ಕಮಗಳೂರು ಜಿಲ್ಲಾ ಘಟಕಗಳ ಪದಗ್ರಹಣ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ವರ್ತಮಾನ ಮತ್ತು ಭವಿಷ್ಯತ್ತುಗಳಿಗೆ ಇತಿಹಾಸ ದಾರಿದೀಪ. ವೀರಶೈವ ಧರ್ಮಕ್ಕೆ ಪ್ರಾಚೀನ ಇತಿಹಾಸವಿದೆ. ಭವ್ಯ ಪರಂಪರೆಯಿದೆ. ಪುಟ ಪುಸ್ತಕ ಬದಲಿಸಬಹುದು. ಆದರೆ ಇತಿಹಾಸ ಬದಲಿಸಲಾಗದು. ಧರ್ಮಾಚರಣೆಯಿಲ್ಲದ ಮನುಷ್ಯನ ವ್ಯಕ್ತಿತ್ವಕ್ಕೆ ಬೆಲೆ ನೆಲೆ ಸಿಗಲಾರದು. ಅಂತರಂಗ ಬಹಿರಂಗ ಶುದ್ಧಿಗೆ ಪ್ರಾಧಾನ್ಯತೆ ಕೊಟ್ಟ ಧರ್ಮ ವೀರಶೈವ ಎಂಬುದನ್ನು ಮರೆಯಬಾರದು. ಧರ್ಮದಿಂದ ಮನುಷ್ಯ ವಿಮುಖನಾದರೆ ಬದುಕು ಅಶಾಂತಿಯ ಕಡಲಾಗುತ್ತದೆ. ವೀರಶೈವ ಲಿಂಗಾಯತ ಒಳಪಂಗಡ ಮರೆತು ಒಂದಾದಾಗ ಮಾತ್ರ ಸಮಾಜಕ್ಕೆ ಉಜ್ವಲ ಭವಿಷ್ಯವಿದೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಪದಾಧಿಕಾರಿಗಳು ಶ್ರೀ ಪೀಠದ ಪವಿತ್ರ ಸ್ಥಾನದಲ್ಲಿ ಪದಗ್ರಹಣ ಮಾಡಿರುವುದು ವಿನೂತನ ದಾಖಲೆಯಾಗಿದೆ. ಇಂಥ ದಿಟ್ಟ ನಿರ್ಧಾರ ಕೈಗೊಂಡ ಜಿಲ್ಲಾ ಘಟಕದ ಆದರ್ಶತೆಯನ್ನು ಪ್ರಶಂಸನೀಯ ನುಡಿಗಳ ಮೂಲಕ ಶ್ರೀ ಜಗದ್ಗುರುಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಹೆಚ್.ಎಂ.ಲೋಕೇಶ ಮಾತನಾಡಿ, ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕೇ ವಿನಾಃ ಜನರನ್ನು ನಾಸ್ತಿಕರನ್ನಾಗಿ ಮಾಡುವ ಪ್ರಯತ್ನವನ್ನು ಯಾರೂ ಮಾಡಬಾರದು. ವ್ಯಕ್ತಿ ಹಿತಕ್ಕಿಂತ ಸಾಮಾಜಿಕ ಹಿತಾಸಕ್ತಿ ದೊಡ್ಡದು. ಮೂಲ ನಂಬಿಕೆಗಳನ್ನು ಮೂಢ ನಂಬಿಕೆ ಎನ್ನದೇ ಬದುಕಿನ ಆಚರಣೆಯಲ್ಲಿ ತರಬೇಕು. ಜಿಲ್ಲಾ ಘಟಕ ಸಮಾಜ ಸಂಘಟನೆ, ಧಾರ್ಮಿಕ ಮೌಲ್ಯಗಳ ಪುನರುತ್ಥಾನಕ್ಕೆ ಸದಾ ಶ್ರಮಿಸುತ್ತಾ ಬಂದಿದೆ. ಶ್ರೀ ರಂಭಾಪುರಿ ಜಗದ್ಗುರುಗಳ ಮಾರ್ಗದರ್ಶನದಲ್ಲಿ ಅತ್ಯುತ್ತಮ ಸಮಾಜ ಕಟ್ಟುವ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ ಸಂಕಲ್ಪ ನಮ್ಮೆಲ್ಲರದಾಗಿದೆ ಎಂದರು.

ಚಿಕ್ಕಮಗಳೂರು ಸಮಾಜದ ಅಧ್ಯಕ್ಷ ಕೆ.ಸಿ.ನಿಶಾಂತ, ಮೂಡಿಗೆರೆ ಸಮಾಜದ ಅಧ್ಯಕ್ಷ ಬಿ.ಎಸ್.ಓಂಕಾರ, ಕಡೂರು ಸಮಾಜದ ಅಧ್ಯಕ್ಷ ಎಸ್.ಪಿ.ರೇಣುಕಾರಾಧ್ಯ, ತರೀಕೆರೆ ಸಮಾಜದ ಅಧ್ಯಕ್ಷ ಎಂ.ಬಿ.ಗಿರಿರಾಜು, ರಾಜ್ಯ ಸಮಿತಿ ಸದಸ್ಯ ಎಂ.ಆರ್.ಪೂರ್ಣೇಶ್ವರಮೂರ್ತಿ ಇವರೆಲ್ಲರೂ ಮಾತನಾಡಿ ವೀರಶೈವ ಲಿಂಗಾಯತ ಸಂಸ್ಕೃತಿಯ ಬೆಳವಣಿಗೆಗಾಗಿ ಶ್ರಮಿಸುವುದಾಗಿ ಸಂಕಲ್ಪ ಕೈಗೊಂಡರು.
ಜಿಲ್ಲಾ ಮಹಾಸಭಾ ಅಧ್ಯಕ್ಷ ಹೆಚ್.ಎಂ.ಲೋಕೇಶ ಇವರು ಜಿಲ್ಲಾ ಹಾಗೂ ತಾಲೂಕ ಘಟಕದ ಸದಸ್ಯರಿಗೆ ಗೋಪ್ಯತೆ ವಿಧಿ ನೆರವೇರಿಸಿದರು. ಆಯ್ಕೆಗೊಂಡ ಎಲ್ಲಾ ಸದಸ್ಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಪ್ರಮಾಣ ಪತ್ರ ವಿತರಿಸಿ ಆಶೀರ್ವದಿಸಿದರು.
ಬೀರೂರು ರುದ್ರಮುನಿ ಶಿವಾಚಾರ್ಯರು, ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯರು, ಬೇರುಗಂಡಿ ಮಠದ ರೇಣುಕ ಮಹಂತ ಶಿವಾಚಾರ್ಯರು, ಕೊಡಿಯಾಲ ಹೊಸಪೇಟೆಯ ಜಗದೀಶ್ವರ ಸ್ವಾಮಿಗಳು, ಸವಡಿ ಮಹಂತ ಶ್ರೀಗಳು ಉಪಸ್ಥಿತರಿದ್ದು ನೂತನ ಸದಸ್ಯರಿಗೆ ಶುಭ ಹಾರೈಸಿದರು.

ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ ಜರುಗಿತು. ಮಹಿಳಾ ಸದಸ್ಯರಿಂದ ಪ್ರಾರ್ಥನೆ ಜರುಗಿತು. ರೇವಣಸಿದ್ಧಪ್ಪ ಸ್ವಾಗತಿಸಿದರು. ಮೋಹನ ರಾಜಣ್ಣ ನಿರೂಪಿಸಿದರು. ಶಿಕ್ಷಕ ಯತೀಶ ವಂದನಾರ್ಪಣೆ ಸಲ್ಲಿಸಿದರು. ಸಮಾರಂಭದ ನಂತರ ಅನ್ನದಾಸೋಹ ಜರುಗಿತು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ
HosanagaraMay 31, 2025ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ