ಶಿವಮೊಗ್ಗ : ಮನೆಯಲ್ಲಿ ಮಲಗಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ.
ಪ್ರವೀಣ್ (29) ಕೊಲೆಯಾದ ಯುವಕ. ಪ್ರವೀಣ್ ಟ್ರ್ಯಾಕ್ಟರ್ ಬಾಡಿಗೆ ಮತ್ತು ಇತರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ. ಬೆಳಿಗ್ಗೆ ಕೆಲಸಕ್ಕೆ ಬರುವಂತೆ ತಿಳಿಸಿದ್ದರೂ, ಅವರು ಫೋನ್ ಕರೆಗಳಿಗೆ ಪ್ರತಿಕ್ರಿಯಿಸಿರಲಿಲ್ಲ. ಅನೇಕ ಬಾರಿ ಕರೆ ಮಾಡಿದರೂ ಸಂಪರ್ಕವಾಗದಿರುವುದರಿಂದ ಕೆಲವು ಯುವಕರು ಅನುಮಾನಗೊಂಡು ಸ್ಥಳಕ್ಕೆ ಹೋದಾಗ ಪ್ರವೀಣ್ ಅವರ ಮೃತದೇಹ ಕಂಡುಬಂದಿದೆ.
ಮೃತದೇಹವು ಮಚ್ಚಿನಿಂದ ಭೀಕರವಾಗಿ ಕೊಚ್ಚಿ ಹತ್ಯೆಯಾದ ಸ್ಥಿತಿಯಲ್ಲಿ ಇದ್ದು, ಹಳೆಯ ವೈಷಮ್ಯದಿಂದಾಗಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನಿಸಲಾಗಿದೆ. ಈ ಪ್ರಕರಣದ ಸಂಬಂಧ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

