ಹೊಸನಗರ : 2019-20ರ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಆರೋಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಸಾಗಿಸುವ ವೇಳೆ ಮಾರ್ಗಮಧ್ಯೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಭಾನುವಾರ ಬೆಳಗ್ಗೆ ಆತನ ಮನೆಯ ಸಮೀಪ ಬಂಧಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ಪ್ರಕರಣದ ಹಿನ್ನಲೆ :
ಹೊಸನಗರ ತಾಲೂಕಿನ ಅಡುಗೋಡಿ ವಾಸಿ ವೆಂಕಟೇಶ್ (36) ಬಿನ್ ಪುಟ್ಟಪ್ಪ ಪರಾರಿಯಾಗಿದ್ದ ಆರೋಪಿ. ಈ ಹಿಂದೆ ಅರಣ್ಯ ಇಲಾಖೆ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆಗೆ ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಪ್ರಕರಣ ದಾಖಲಾಗಿತ್ತು.
ಜುಲೈ 15ರಂದು ಆರೋಪಿಯನ್ನು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಯನ್ನು ಶಿವಮೊಗ್ಗದ ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಜೀಪಿನಲ್ಲಿ ಕರೆದೊಯ್ಯುವ ವೇಳೆ ಹಸಿವಿನ ಕಾರಣ ನೀಡಿ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಹೋಟೆಲ್ ಒಂದರ ಮುಂಭಾಗ ಜೀಪ್ ನಿಲ್ಲಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಉಪವಲಯ ಅರಣ್ಯ ಆಧಿಕಾರಿ ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬಡೆಬಾಯಿ ಆರೋಪಿಗೆ ಆಹಾರ ತರಲು ತೆರಳಿದಾಗ, ಜೀಪಿನಲ್ಲಿದ್ದ ಇಲಾಖೆಯ ಇತರೆ ಸಿಬ್ಬಂದಿಗಳಾದ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಹಾಗೂ ವಾಹನ ಚಾಲಕ ನಾಗೇಂದ್ರ ಅವರ ಮೇಲೆ ಆರೋಪಿ ಏಕಾಏಕಿ ದಾಳಿ ನಡೆಸಿ ಪರಾರಿಯಾಗಿದ್ದ.
ಕೊಲ್ಲೂರು ವನ್ಯಜೀವಿ ವಲಯ ಕಟ್ಟಿನಹೊಳೆ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸುನೀಲ್ ಡಿ ಕುಂಬಾರ್ ನೀಡಿದ ದೂರಿನ ಮೇರೆಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪೊಲೀಸರ ಸತತ ಪ್ರಯತ್ನದಿಂದ ಆರೋಪಿಯನ್ನು ಪತ್ತೆ ಹಚ್ಚಿ ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಂಗತಿಯನ್ನು ಸಾರ್ವಜನಿಕರು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.
ಸಿಪಿಐ ಗೌಡಪ್ಪಗೌಡ ಅವರ ಮಾರ್ಗದರ್ಶನದಲ್ಲಿ ನಡೆದ ಈ ಪತ್ತೆ ಕಾರ್ಯದಲ್ಲಿ ಪಿಎಸ್ಐ ಶಂಕರಗೌಡ ಪಾಟೀಲ್, ಸಿಬ್ಬಂದಿಗಳಾದ ಶಿವಕುಮಾರ, ಸುನೀಲ್, ನಗರ ಪೊಲೀಸ್ ಠಾಣೆ ಸಿಬ್ಬಂದಿಗಳಾದ ರಾಘವೇಂದ್ರ, ಮಂಜುನಾಥ್ ಪಾಲ್ಗೊಂಡಿದ್ದರು.