ಸಾಗರ: ತಾಲೂಕಿನ ತಾಳಗುಪ್ಪ ಹೋಬಳಿ ವ್ಯಾಪ್ತಿಯ ಕಾನ್ಲೆ ಗ್ರಾಮದ ಸರ್ವೆ ನಂಬರ್ 123ರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ ಕಲ್ಲು ಕ್ವಾರಿ ಮೇಲೆ ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಆರ್ ದಿಢೀರ್ ದಾಳಿ ನಡೆಸಿದ್ದಾರೆ.
ಸಾರ್ವಜನಿಕರಿಂದ ಬಂದ ಖಚಿತ ದೂರಿನ ಮೇರೆಗೆ ಹಿಡುವಳಿ ಜಮೀನಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಗಳ ಜೀಪ್ ಸ್ಥಳಕ್ಕೆ ಬರುತ್ತಿದ್ದಂತೆ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 7ರಿಂದ 8 ಮಂದಿ ಕಾರ್ಮಿಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಜೆಸಿಬಿ ಯಂತ್ರವನ್ನು ಅಧಿಕಾರಿಗಳು ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧ ಕಠಿಣ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ದಾಳಿಯ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಎಂ.ಜಿ. ನಾಯಕ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸಾಗರ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಾ. ಪ್ರತಿಭಾ ಆರ್ ಅವರು ಅಕ್ರಮ ಮರಳು ದಂಧೆ, ಕಲ್ಲು ಕ್ವಾರಿ ಮತ್ತು ಸರ್ಕಾರಿ ಭೂ ಒತ್ತುವರಿ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರಂಭಿಕ ದಿನಗಳಲ್ಲಿ ಮಾತ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಸಾರ್ವಜನಿಕ ಅಭಿಪ್ರಾಯಕ್ಕೆ ಭಿನ್ನವಾಗಿ, ಅವರು ಸತತ ದಾಳಿಗಳ ಮೂಲಕ ಅಕ್ರಮ ದಂಧೆಕೋರರಿಗೆ ಎಚ್ಚರಿಕೆ ನೀಡಿದ್ದಾರೆ.
ಸ್ಥಳೀಯರ ಪ್ರಕಾರ, ಮಳೆಗಾಲದ ನಡುವೆಯೂ ಅಕ್ರಮ ಕಲ್ಲು ಕ್ವಾರಿಗಳಿಂದ ಭಾರಿ ಟಿಪ್ಪರ್ ಮತ್ತು ಲಾರಿಗಳು ಸಂಚರಿಸುತ್ತಿರುವುದರಿಂದ ಗ್ರಾಮೀಣ ರಸ್ತೆಗಳು ಹಾಳಾಗಿವೆ. ಇದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳ ಓಡಾಟಕ್ಕೂ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಪರಿಸರ ನಾಶದ ಜೊತೆಗೆ ಸಾರ್ವಜನಿಕ ರಸ್ತೆಗಳಿಗೂ ಹಾನಿ ಉಂಟುಮಾಡುತ್ತಿರುವ ಇಂತಹ ಅಕ್ರಮ ಕಲ್ಲು ಗಣಿಗಾರಿಕೆಗೆ ಶಾಶ್ವತ ಬ್ರೇಕ್ ಹಾಕಬೇಕು ಎಂದು ಸ್ಥಳೀಯರು ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ತಹಶೀಲ್ದಾರ್ ಡಾ. ಪ್ರತಿಭಾ ಆರ್ ಖಡಕ್ ಎಚ್ಚರಿಕೆ ನೀಡಿದ್ದು, ಸಾಗರ ತಾಲೂಕಿನ ಯಾವುದೇ ಭಾಗದಲ್ಲೂ ಅಕ್ರಮ ಕಲ್ಲು ಅಥವಾ ಮರಳು ಗಣಿಗಾರಿಕೆಯನ್ನು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
“ಎಷ್ಟೇ ಪ್ರಭಾವಿಗಳಾಗಿದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆಸ್ತಿ ಮತ್ತು ನೈಸರ್ಗಿಕ ಸಂಪತ್ತನ್ನು ರಕ್ಷಿಸಲು ನಿರಂತರ ದಾಳಿ ಮುಂದುವರಿಯಲಿದೆ. ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

