ಶಿವಮೊಗ್ಗ ; ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವರು ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಎನ್.ಚೆಲುವರಾಯಸ್ವಾಮಿ ಕರೆ ನೀಡಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಇಂದಿನಿಂದ ನ.09 ರವರೆಗೆ ಕೃಷಿ ಮಹಾವಿದ್ಯಾಲಯ ನವುಲೆ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ-ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತ್ಯುತ್ತಮ ಕೃಷಿ ಮೇಳ ಮತ್ತು ಪ್ರದರ್ಶವನ್ನು ಏರ್ಪಡಿಸಲಾಗಿದ್ದು, ಭತ್ತದ ಮತ್ತು ಇತರೆ ಉತ್ತಮ ತಳಿಗಳನ್ನು ಬಿಡುಗಡೆಗೊಳಿಸಲಾಗಿದೆ. ರೈತರಿಗೆ ವಿಶ್ವವಿದ್ಯಾಲಯ ನೀಡಾಬೇಕಾಗಿರುವುದು ಇದನ್ನೇ. ಕೃಷಿಯನ್ನು ಉದ್ದಿಮೆಯಾಗಿ ಪರಿವರ್ತಿಸಿ ರೈತರಿಗೆ ಉತ್ತಮ ಆದಾಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸೌಲಭ್ಯಗಳು, ಕಾರ್ಯಕ್ರಮಗಳನ್ನು ನೀಡುತ್ತಿವೆ. ಕೆಪೆಕ್ ಸಂಸ್ಥೆಯು ರಾಜ್ಯದಲ್ಲಿ 5 ಸಾವಿರ ಘಟಕಗಳಿಗೆ ಸಬ್ಸಿಡಿ ನೀಡಿದೆ ಎಂದ ಅವರು ರೈತರಿಗೆ ಎಂಒ 4 ತಳಿಯನ್ನು ನೀಡಲು ಕೃಷಿ ಇಲಾಖೆ ಮತ್ತು ವಿಶ್ವವಿದ್ಯಾಲಯಗಳು ಬದ್ದವಾಗಿದೆ.

ಫಿಲಿಫೈನ್ಸ್ ದೇಶದಲ್ಲಿ ಸುಮಾರು 25 ರಿಂದ 30 ದಿನಗಳ ಕಾಲ ಮಳೆ ನಿರಂತರವಾಗಿ ಬಂದರೂ ಹಾನಿಯಾಗದಂತಹ ಭತ್ತದ ತಳಿಯನ್ನು ಕಂಡು ಹಿಡಿದಿದ್ದು, ಮುಂದಿನ ದಿನಗಳಲ್ಲಿ ನಮ್ಮ ವಿಜ್ಞಾನಿಗಳೂ ರೈತರಿಗೆ ಇಂತಹ ತಳಿಗಳನ್ನು ಸಂಶೋಧಿಸಿ ನೀಡುವರು ಎಂದು ಭರವಸೆ ವ್ಯಕ್ತಪಡಿಸಿದರು.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ, ಕಡಿಮೆ ಖರ್ಚು ಮಾಡಿ ಹೆಚ್ಚು ಇಳುವರಿ ನೀಡುವ ಬೆಳೆಗಳನ್ನು ನೀಡುವ ತಳಿಗಳನ್ನು ನೀಡಲು ವಿಶ್ವವಿದ್ಯಾಲಯಗಳು ಶ್ರಮಿಸುತ್ತಿವೆ. ಲ್ಯಾಬ್ ಟು ಲ್ಯಾಂಡ್ ಎಂಬುದು ಸರ್ಕಾರದ ಪರಿಕಲ್ಪನೆಯಾಗಿದ್ದು ವಿಜ್ಞಾನಿಗಳು ಮತ್ತು ರೈತರು ಸಂಪರ್ಕದಲ್ಲಿರಬೇಕು ಎಂದರು.
ರಾಜ್ಯದಲ್ಲಿ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಅಭಾವ ಉಂಟಾಗಿಲ್ಲ. ಸಾಕಷ್ಟು ಪೂರೈಕೆ ಮಾಡಲಾಗಿದೆ. ಕೇಂದ್ರದಿಂದ 3.5 ಲಕ್ಷ ಮೆ.ಟನ್ ಗೊಬ್ಬರ ಸರಬರಾಜು ಕೊರತೆಯಾದರೂ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ಕೃಷಿ ಕೃಷಿ ಹೊಂಡ ಯಾರು ಎಷ್ಟು ಬೇಕಾದರೂ ಮಾಡಲು ಅವಕಾಶ ಕಲ್ಪಿಪಸಲಾಗಿದೆ. ಪ್ರಯೋಗಾಲಯ ಬಲವರ್ಧನೆ ಮಾಡುವ ಕೆಲಸ ಆಗುತ್ತಿದೆ. ರೈತರು ಮಣ್ಣು ಪರೀಕ್ಷೆ ಮಾಡಿಸಿ ಎಂದ ಅವರು ಇಡೀ ರಾಜ್ಯದಲ್ಲಿ ಕೃಷಿಯಲ್ಲಿ ಡಿಜಿಟಲ್ ತಂತ್ರಜ್ಞಾನ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಮಲೆನಾಡಿನಲ್ಲಿ ಅಡಿಕೆ ಬೆಳೆ ಹೆಚ್ಚಾಗಿದೆ. 20 ರಿಂದ 27 ಲಕ್ಷ ಹೆ. ಬೆಳೆ ಹೆಚ್ಚಾಗಿದೆ. ಕೃಷಿಗೆ ಹೆಚ್ಚಿನ ಆದ್ಯತೆ ನೀಡಲು ಮೂಡಿಗೆರೆ, ದಾವಣಗೆರೆ, ಬೆಳಗಾವಿ, ಬೆಂಗಳೂರು ಮತ್ತು ಮಂಡ್ಯದಲ್ಲಿ ಕೃಷಿ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಕಳೆದ ಬಾರಿ ಮಳೆಗೆ 13 ರಿಂದ 16 ಲಕ್ಷ ಹೆ. ಬೆಳೆ ನಷ್ಟ ಸಂಭವಿಸಿದ್ದು ಎನ್ಡಿಆರ್ಎಫ್ ಪರಿಹಾರದ ಜೊತೆಗೆ ರಾಜ್ಯ ಸರ್ಕಾರ ರೂ.8.5 ಸಾವಿರ ಪರಿಹಾರ ನೀಡುತ್ತಿದೆ ಎಂದ ಅವರು ರೈತರ ಆದಾಯ ಹೆಚ್ಚಿಸಲು ಸರ್ಕಾರ ಎಲ್ಲ ರೀತಿಯಿಂದ ಸಹಕರಿಸುತ್ತಿದ್ದು ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಉತ್ತಮ ಬೆಲೆ ಪಡೆಯಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಹಾಗೂ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯನಾಯ್ಕ ಮಾತನಾಡಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 6 ಜಿಲ್ಲೆ ವಿದ್ಯಾರ್ಥಿಗಳು ಹಾಗೂ ರೈತರು ಬರಲಿದ್ದು, ರೈತರ ಅನುಕೂಲಕ್ಕಾಗಿ ಅನೇಕ ತಳಿಗಳನ್ನು ಬಿಡುಗಡೆ ಮಾಡಲಾಗಿದೆ, 13 ತಾಂತ್ರಿಕ ತಳಿಗಳನ್ನು ಬಿಡುಗಡೆ 205 ಸಂಶೋಧನೆಗಳನ್ನು ನಡೆಸಲಾಗಿದ್ದು 90 ತಳಿಗಳಲ್ಲಿ 737 ಪ್ರಯೋಗ ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣದ ಅವಕಾಶ ಮಾಡಿಕೊಡಲಾಗಿದ್ದು, ಪರೋಕ್ಷವಾಗಿ 4 ಲಕ್ಷ ರೈತರನ್ನು ತಲುಪುತ್ತಿದ್ದೇವೆ. ಇರುವಕ್ಕಿಯಲ್ಲಿ ರೂ.255 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದ್ದು ಇದಕ್ಕೆ ಅಗತ್ಯವಾದ ಪೀಠೋಪಕರಣಕ್ಕೆ ರೂ.10 ಕೋಟಿ ಅನುದಾನದ ಅವಶ್ಯಕತೆ ಇದೆ. ಹಾಗೂ 2013 ರಿಂದ ಇಲ್ಲಿಯವರೆಗೆ ವಿಶ್ವವಿದ್ಯಾಯದಲ್ಲಿ ಯಾವುದೇ ಹುದ್ದೆಗಳು ಭರ್ತಿಯಾಗಿಲ್ಲ, ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ತುಂಬುವಂತೆ ಮನವಿ ಮಾಡಿದರು.

ಇದೇ ವೇಳೆ ಉತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಯನ್ನು ವಿತರಣೆ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಚೇತನ್ ಕೆ, ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಎಸ್.ಆರ್ ಮಜುನಾಥ ಗೌಡ, ಡಾ.ಹನುಮಂತಪ್ಪ, ಆಡಳಿತ ಮಂಡಳಿ ಸದಸ್ಯರಾದ ಬಿ.ಕೆ ಕುಮಾರಸ್ವಾಮಿ, ಜೆ ಜೆ ಕಾವೇರಪ್ಪ, ದೇವಿಕುಮಾರ್, ಹಾಪ್ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ರಾಮಕೃಷ್ಣ ಆಶ್ರಮದ ವಿನಯಾನಂದ ಸರಸ್ವತಿ ಸ್ವಾಮೀಜಿ, ವಿವಿಧ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು, ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ವಿಶ್ವವಿದ್ಯಾಲಯದ ಅಧಿಕಾರಿ ವರ್ಗದವರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ರೈತರು ಭಾಗವಹಿಸಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





