ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಮಳೆಕಾಡು ಸಂಶೋಧನಾ ಕೇಂದ್ರ (Agumbe Rainforest Research Station–ARRS) ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಕಾಳಿಂಗ ಸರ್ಪ ಸಂಶೋಧನೆ ಹೆಸರಿನಲ್ಲಿ ಅಕ್ರಮ ಭೂಮಿ ಖರೀದಿ, ಕಟ್ಟಡ ನಿರ್ಮಾಣ ಹಾಗೂ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪರಿಸರ ಪ್ರೇಮಿಗಳು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಪರಿಸರಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಜನಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಹಾಗು ಪತ್ರಕರ್ತ ಉದಯ್ ಸಾಗರ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಸಲ್ಲಿಸಿದ ದೂರು ಆಧರಿಸಿ ತನಿಖೆಗೆ ಆದೇಶ ನೀಡಲಾಗಿದೆ. ಸಚಿವರ ಅಧಿಕೃತ ಪತ್ರದಲ್ಲಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (PCCF) ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದ್ದು, 10 ದಿನಗಳೊಳಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ದೂರುದಾರರ ಪ್ರಕಾರ, ಆಗುಂಬೆಯ ಸೋಮೇಶ್ವರ ವನ್ಯಜೀವಿ ಅಭಯಾರಣ್ಯದೊಳಗೆ ಸಂಸ್ಥೆಯವರು ಅಕ್ರಮವಾಗಿ ಜಮೀನು ಖರೀದಿಸಿದ್ದು, ವರ್ಷಪೂರ್ತಿ ಕಾಳಿಂಗ ಸರ್ಪ ಸಂಶೋಧನೆ ಹೆಸರಿನಲ್ಲಿ ಛಾಯಾಗ್ರಹಣ ಮತ್ತು ವೀಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ. ಕಾಳಿಂಗ ಸರ್ಪ ಮತ್ತು ಅದರ ಮರಿಗಳನ್ನು ಅಕ್ರಮವಾಗಿ ಹಿಡಿದು ವನ್ಯಜೀವಿ ಛಾಯಾಗ್ರಾಹಕರಿಗೆ ಹಣ ಪಡೆದು ಚಿತ್ರೀಕರಣ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅರಣ್ಯ ಭೂಮಿ ಒತ್ತುವರಿ, ಕಟ್ಟಡ ನಿರ್ಮಾಣ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಜಮೀನು ಖರೀದಿಸಿರುವ ಆರೋಪಗಳನ್ನೂ ಜನಸಂಗ್ರಾಮ ಪರಿಷತ್ ಮುಂದಿರಿಸಿದೆ. ಈ ಚಟುವಟಿಕೆಗಳು ಅರಣ್ಯ ಹಾಗೂ ವನ್ಯಜೀವಿ ಕಾಯಿದೆಗಳ ನೇರ ಉಲ್ಲಂಘನೆ ಎಂದು ಅವರು ಸಚಿವರ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಪರಿಸರಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತನಿಖೆಗೆ ಆದೇಶ ಹೊರಡಿಸಿದ್ದಾರೆ.

