ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣಗಳು ಮರುಕಳಿಸುತ್ತಿರುವ ಬಗ್ಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳನ್ನು ತಡೆಯಲು ಪೊಲೀಸ್ ಇಲಾಖೆ ಹೆಚ್ಚು ಬದ್ಧತೆಯಿಂದ ಮತ್ತು ಕಠಿಣವಾಗಿ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಕ್ಷೇತ್ರದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಘಟನೆಗಳು ನಡೆಯುತ್ತಿದ್ದು, ಇದಕ್ಕೆ ಪ್ರೋತ್ಸಾಹ ನೀಡುವವರ ವಿರುದ್ಧವೂ ಕ್ರಮ ಆಗಬೇಕು ಎಂದು ಹೇಳಿದರು.
ಅಕ್ರಮ ಗೋ ಸಾಗಾಟದ ವಿಚಾರದಲ್ಲಿ ಕೆಲ ಸಂದರ್ಭಗಳಲ್ಲಿ ಪೊಲೀಸರ ನಡೆ ಪ್ರಶ್ನಾರ್ಹವಾಗಿದೆ ಎಂದು ಆರೋಪಿಸಿದ ಅವರು, ಗೋವುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವ ಸಾರ್ವಜನಿಕರು ಹಾಗೂ ಗೋ ರಕ್ಷಕರ ಮೇಲೆಯೇ ಪ್ರಕರಣ ದಾಖಲಿಸಿರುವ ಘಟನೆಗಳೂ ನಡೆದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚೆಗೆ ಸಿಕ್ಕಿಬಿದ್ದ ಗೋ ಸಾಗಾಟಗಾರ ಹಲವು ವರ್ಷಗಳಿಂದ ಇದೇ ರೀತಿಯ ಕೃತ್ಯದಲ್ಲಿ ತೊಡಗಿದ್ದಾನೆ ಎಂದು ಆರೋಪಿಸಿದ ಆರಗ, ಇಂತಹ ಪ್ರಕರಣಗಳಲ್ಲಿ ಸಾಮಾನ್ಯ ಕಾಯ್ದೆಗಳಡಿ ಕೇಸ್ ದಾಖಲಿಸುವುದರಿಂದ ಆರೋಪಿಗಳು ಬೇಗನೇ ಜಾಮೀನು ಪಡೆದು ಮತ್ತೆ ಅದೇ ಕೃತ್ಯ ಮುಂದುವರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.
ತಾವು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಗೋವಧೆ ನಿಷೇಧ ಹಾಗೂ ಗೋ ಸಂರಕ್ಷಣೆಗೆ ಸಂಬಂಧಿಸಿದ ಕಾಯ್ದೆಯನ್ನು ಮಂಡಿಸಿ ಅಂಗೀಕರಿಸಲಾಗಿತ್ತು. ಆ ಕಾಯ್ದೆಯಡಿ ಪ್ರಕರಣ ದಾಖಲಿಸಿದರೆ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವುದಿಲ್ಲ. ಆದ್ದರಿಂದ ಪೊಲೀಸರು ಆ ಬಲವಾದ ಕಾನೂನನ್ನು ಪರಿಣಾಮಕಾರಿಯಾಗಿ ಬಳಸಬೇಕು ಎಂದು ಅವರು ಒತ್ತಾಯಿಸಿದರು.
ಅಕ್ರಮ ಗೋ ಸಾಗಾಟಕ್ಕೆ ಸಂಪೂರ್ಣ ಕಡಿವಾಣ ಹಾಕುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಲಯ ಐಜಿಪಿ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿರುವುದಾಗಿ ಆರಗ ಜ್ಞಾನೇಂದ್ರ ತಿಳಿಸಿದರು.

