ರಿಪ್ಪನ್ಪೇಟೆ : ತೀರ್ಥಹಳ್ಳಿಯ ಇಲ್ಲಿನ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 10-12 ದಿನಗಳ ಹಿಂದೆ ಸಾಮಾನ್ಯ ಹೆರಿಗೆಯಾದ ನಂತರ ಆರೋಗ್ಯ ತೀವ್ರವಾಗಿ ಏರುಪೇರಾದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಸುಮಾ (27) ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
ಹೊಸನಗರ ತಾಲ್ಲೂಕಿನ ಕೋಡೂರು ಸಮೀಪದ ಶಾಖವಳ್ಳಿ ಗ್ರಾಮದ ನಿವಾಸಿಯಾದ ಗಾರೆ ಕೆಲಸಗಾರ ಮಹೇಶ್ ಎಸ್ ಎಂಬುವರ ಪತ್ನಿ ಸುಮಾಗೆ ಹೆರಿಗೆಯಾದ ತೀವ್ರ ರಕ್ತಸ್ರಾವ ಉಂಟಾಗಿ ನಂತರ ಆರೋಗ್ಯದಲ್ಲಿ ಗಂಭೀರ ಸಮಸ್ಯೆಗಳು ಉದ್ಭವಿಸಿತ್ತು, ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ವೈದ್ಯರ ತಂಡದ ನಿರಂತರ ಪ್ರಯತ್ನಗಳಿಗೂ ಅವರು ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಈ ಪ್ರಕರಣ ಕಳೆದ ಕೆಲವು ದಿನಗಳಿಂದ ತೀರ್ಥಹಳ್ಳಿಯಲ್ಲಿ ಸಾರ್ವಜನಿಕ ಮತ್ತು ಕುಟುಂಬಸ್ಥರ ನಡುವೆ ಚರ್ಚೆಯ ವಿಷಯವಾಗಿತ್ತು. ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ಸುಮಾ ಅವರ ಆರೋಗ್ಯ ಸ್ಥಿತಿ ಕುಸಿತಗೊಂಡಿದೆ ಎಂದು ಕುಟುಂಬದವರು ಆರೋಪಿಸಿದ್ದರು. ಈ ವೇಳೆ ಹುಟ್ಟಿದ ನವಜಾತ ಶಿಶುವಿನ ಆರೋಗ್ಯ ಕೂಡ ತೀವ್ರ ಗಂಭೀರವಾಗಿದೆ, ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬುಧವಾರ ಈ ಪ್ರಕರಣದ ಹಿನ್ನೆಲೆಯಲ್ಲಿ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಎದುರು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು ಮತ್ತು ನ್ಯಾಯಯುತ ತನಿಖೆಗೆ ಆಗ್ರಹಿಸಿದರು. ನಂತರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ ಅವರು ಕುಟುಂಬದವರೊಂದಿಗೆ ಮಾತುಕತೆ ನಡೆಸಿ, ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಅಗತ್ಯ ವೆಚ್ಚವನ್ನು ಭರಿಸುವ ಭರವಸೆ ನೀಡಿದರು.

ಆದರೆ, ಎಲ್ಲ ಪ್ರಯತ್ನಗಳ ನಡುವೆಯೂ ಸುಮಾ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅವರ ಸಾವಿನ ಪರಿಣಾಮವಾಗಿ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ವೈದ್ಯರ ನಿರ್ಲಕ್ಷ್ಯದ ಆರೋಪದ ಕುರಿತು ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





