ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಇಂದಿನಿಂದಲೇ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.
ನವದೆಹಲಿಯ ವಿಜ್ಞಾನಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಅಯುಕ್ತ ರಾಜಿವ್ ಕುಮಾರ್, ಕರ್ನಾಟಕದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏಪ್ರಿಲ್ 13 ರಿಂದ ಆರಂಭವಾಗಲಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಅಂತಿಮ ದಿನಾಂಕವಾಗಿದ್ದು, ಮೇ 10 ರಂದು ಮತದಾನ ನಡೆಯಲಿದ್ದು ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದರು.
ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ. ಪುರುಷರು 2,63,43,561, ಮಹಿಳೆಯರು 2,59,26,319 ಮತ್ತು ತೃತೀಯಲಿಂಗಿಗಳು 4,699 ಮತದಾರರು ಇದ್ದಾರೆ. 12.15 ಲಕ್ಷ ಯುವ ಮತದಾರರಿದ್ದಾರೆ.
5.55 ಲಕ್ಷ ವಿಕಲಚೇತನ ಮತದಾರರಿದ್ದು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗುವುದು. ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು.
ಜೇನುಕುರುಬ, ಕಾಡುಕುರುಬ ಮತದಾರರಿಗೆ ಪ್ರತ್ಯೇಕ ಬೂತ್ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ 58,282 ಮತಗಟ್ಟೆಗಳ ಸ್ಥಾಪನೆಯಾಗಲಿದೆ. ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆ, ಮಹಿಳಾ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆ ಸಂಖ್ಯೆ 1,320 ಹಾಗೂ 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆ ಸ್ಥಾಪನೆ ಮಾಡಲಾಗುವುದು.
ಅಭ್ಯರ್ಥಿಗಳ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಿದ್ದು, ಮತದಾರರಲ್ಲಿ ಜಾಗೃತಿ ಮೂಡಿಸಲು ಆಯೋಗದಿಂದ ಕ್ರಮ ಕೈಗೊಳ್ಳಲಾಗುವುದು. ಚುನಾವಣೆಗಾಗಿ 2400 ವೀಕ್ಷಕರ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.