ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೀರು ಹರಿಸುವ ವಿಚಾರವಾಗಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಯಿತು.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭದ್ರಾ ಜಲಾಶಯದ ಪ್ರಸ್ತುತ ನೀರಿನ ಸಂಗ್ರಹ, ಮಲೆನಾಡು ಹಾಗೂ ಜಲಾನಯನ ಪ್ರದೇಶಗಳ ಮಳೆ ಪರಿಸ್ಥಿತಿ ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಪ್ರಮಾಣದ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಜಲಾಶಯದ ನೀರಿನ ಮಟ್ಟ, ಮುಂಗಾರು ಬೆಳೆಗಳ ಅವಶ್ಯಕತೆ ಹಾಗೂ ಅಚ್ಚುಕಟ್ಟು ಪ್ರದೇಶದ ರೈತರ ಸ್ಥಿತಿಗತಿ ಬಗ್ಗೆ ವಿವರವಾದ ಮಾಹಿತಿ ನೀಡಿದರು. ರೈತರಿಗೆ ನೀರು ಒದಗಿಸುವ ವಿಷಯದಲ್ಲಿ ಜಾಗ್ರತೆಯಿಂದ ನಿರ್ಧಾರ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಸಭೆಯ ಬಳಿಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರೈತರ ಹಿತಾಸಕ್ತಿ ಕಾಯುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು. ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಂಗಾರು ಬೆಳೆಗಳಿಗೆ ನೀರು ಹರಿಸುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಶೀಘ್ರದಲ್ಲೇ ಸಮಾಲೋಚನೆ ನಡೆಸಲಾಗುವುದು ಎಂದರು.
ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ, ಜಲಾಶಯದ ನೀರಿನ ಲಭ್ಯತೆ ಹಾಗೂ ಮುಂದಿನ ದಿನಗಳ ಮಳೆಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾಲಮಿತಿಯೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಸಭೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕರಾದ ಕೆ.ಎಸ್. ಬಸವಂತಪ್ಪ, ಬಿ.ಕೆ. ಸಂಗಮೇಶ್, ಡಿ.ಜಿ. ಶಾಂತನಗೌಡ, ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು, ರೈತ ಮುಖಂಡರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

