ಸೊರಬ : ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಿನ ಅಪಪ್ರಚಾರವನ್ನು ಖಂಡಿಸಿ ಹಾಗೂ ಆ ಅಭಿಯಾನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಸೊರಬದಲ್ಲಿ ಬಿಜೆಪಿ ಮಂಡಲ ಘಟಕದ ವತಿಯಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ ಮತ್ತು ಸಭೆಯನ್ನು ಶನಿವಾರ ಆಯೋಜಿಸಲಾಗಿತ್ತು .
ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಕೇಂದ್ರವಾಗಿ ಗುರುತಿಸಿಕೊಂಡಿರುವ ಶ್ರೀ ಮಂಜುನಾಥಸ್ವಾಮಿಯ ಧರ್ಮಸ್ಥಳ, ಅನ್ನದಾನ, ಔಷಧದಾನ, ವಿದ್ಯಾದಾನ ಹಾಗೂ ಅಭಯದಾನದ ಮೂಲಕ ಸಮಾಜಮುಖಿ ಸೇವೆ ಸಲ್ಲಿಸುತ್ತಿದೆ. ಇಂತಹ ಪವಿತ್ರ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಮತ್ತು ವಿವಿಧ ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಧನಂಜಯ್ ಸರ್ಜಿ , “ಶ್ರೀ ಕ್ಷೇತ್ರ ಧರ್ಮಸ್ಥಳ ದೇಶದ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ಕೇಂದ್ರವಾಗಿದೆ. ಅಂತಹ ಕ್ಷೇತ್ರಕ್ಕೆ ಕಳಂಕ ತರುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ. ಧರ್ಮಸ್ಥಳದ ಮೇಲೆ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಮೆರವಣಿಗೆಯಲ್ಲಿ ಬಿಜೆಪಿ ಸೊರಬ ಘಟಕದ ಮುಖಂಡರು, ಕಾರ್ಯಕರ್ತರು, ತಾಲ್ಲೂಕಿನ ವಿವಿಧ ಹಿಂದೂ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಂಘ ಪರಿವಾರದ ಪ್ರಮುಖರು ಭಾಗವಹಿಸಿದ್ದರು. ಸ್ಥಳೀಯ ಭಕ್ತರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
ಪ್ರತಿಭಟನೆಯ ವೇಳೆ ಧರ್ಮಸ್ಥಳದ ಗೌರವವನ್ನು ಉಳಿಸಲು ಹಾಗೂ ಅಪಪ್ರಚಾರ ನಿಲ್ಲಿಸುವಂತೆ ಒತ್ತಾಯಿಸುವ ಘೋಷಣೆಗಳನ್ನು ಕೂಗಲಾಯಿತು. ಸಭೆಯ ಅಂತ್ಯದಲ್ಲಿ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

