ಭದ್ರಾವತಿ : ತಾಲ್ಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ಸೋಮವಾರ ಎಸ್ಐಆರ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಿಎಲ್ಓ ಮಂಜುಳಾ (50) ಕುಸಿದು ಬಿದ್ದು ಮೃತರಾಗಿದ್ದಾರೆ.
ಮಂಜುಳಾ ಭದ್ರಾವತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ಸೋಮವಾರ ಮಧ್ಯಾಹ್ನ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್ಐಆರ್ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ, ಬಿಎಲ್ಒ ಮತ್ತು ಸಹಾಯಕ ಸಿಬ್ಬಂದಿ ಭಾಗಿಯಾಗಿದ್ದರು.
ಈ ವೇಳೆ ಮಂಜುಳಾ ಆಕಸ್ಮಿಕವಾಗಿ ಕುಸಿದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಅರಬಿಳಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಆಸ್ಪತ್ರೆಗೆ ತೆರಳುವ ಮೊದಲೇ ಮಂಜುಳಾ ಸಾವನ್ನಪ್ಪಿದ್ದಾರೆ.
ಮೂಲಗಳ ಪ್ರಕಾರ, ಮಂಜುಳಾ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಭದ್ರಾವತಿ ತಾಲ್ಲೂಕು ಆಸ್ಪತ್ರೆಯಲ್ಲಿ ತಹಶೀಲ್ದಾರ್ ಪ್ರದೀಪ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

