ಶಿವಮೊಗ್ಗ : ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಇಟ್ಟುಹಾಕಲಾಗಿದೆ ಎಂಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ, ಸ್ಥಳದಲ್ಲಿ ತಕ್ಷಣ ಶೋಧ ಕಾರ್ಯಾಚರಣೆ ನಡೆಸಲಾಯಿತು.

ನ್ಯಾಯಾಲಯದ ಆವರಣದಲ್ಲಿ ಶ್ವಾನದಳ ಮತ್ತು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿಗಳು ತಲುಪಿ ತಕ್ಷಣ ಆವರಣ, ವಿವಿಧ ಕೊಠಡಿಗಳು ಮತ್ತು ಕಾರಿಡಾರ್ಗಳಲ್ಲಿ ಸಂಪೂರ್ಣ ತಪಾಸಣೆ ನಡೆಸಿದರು.
ಈ ಘಟನೆ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದು, ನ್ಯಾಯಾಲಯಕ್ಕೆ ಬರುವ ವಕೀಲರು, ಸಿಬ್ಬಂದಿ ಮತ್ತು ಸಾರ್ವಜನಿಕರ ವಾಹನಗಳ ತಪಾಸಣೆ ಗಂಭೀರವಾಗಿ ಮಾಡಲಾಗಿದೆ. ವಕೀಲರ ಸಂಘದ ಪದಾಧಿಕಾರಿಗಳು, ಭದ್ರತಾ ಸಿಬ್ಬಂದಿ ಮತ್ತು ಪೊಲೀಸರ ತಪಾಸಣಾ ಕಾರ್ಯದಲ್ಲಿ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಪ್ರಸ್ತುತ, ಯಾವುದೇ ಅಪಾಯ ಕಂಡುಬಂದಿಲ್ಲದಿದ್ದರೂ, ಭದ್ರತಾ ಕ್ರಮಗಳನ್ನು ಗಟ್ಟಿಗೊಳಿಸುವ ಮೂಲಕ ನ್ಯಾಯಾಲಯದ ಸುತ್ತಮುತ್ತಲಿನ ಪರಿಸರವನ್ನು ಸುರಕ್ಷಿತವಾಗಿಡಲು ಅಧಿಕಾರಿಗಳು ಜಾಗೃತಿ ವಹಿಸಿದ್ದಾರೆ.
‘ತಮಿಳುನಾಡಿನ ಮಾಜಿ ಸಚಿವ ಉದಯನಿಧಿ ಸ್ಟಾಲಿನ್ ಮೇಲಿನ ಪ್ರಕರಣವೊಂದರ ವಿಚಾರಣೆ ಹಿನ್ನೆಲೆಯಲ್ಲಿ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಇಟ್ಟು ಉಡಾಯಿಸಲಾಗುತ್ತಿದೆ’ ಎಂದು ಬೆದರಿಕೆಯ ಸಂದೇಶದ ಉಲ್ಲೇಖವಿರುವ ಇ-ಮೇಲ್ ತಡರಾತ್ರಿ 1.37ಕ್ಕೆ ಶಿವಮೊಗ್ಗ ನ್ಯಾಯಾಲಯಕ್ಕೆ ಬಂದಿದೆ. ಹೀಗಾಗಿ ತಪಾಸಣೆ ನಡೆಸಲಾಯಿತು. ಯಾವುದೇ ಬಾಂಬ್ ಕಂಡು ಬಂದಿಲ್ಲ. ಅದೊಂದು ಹುಸಿ ಬಾಂಬ್ ಸಂದೇಶ’.
– ಬಿ.ನಿಖಿಲ್, ಶಿವಮೊಗ್ಗ ಎಸ್ಪಿ
ಶಿವಮೊಗ್ಗ ನ್ಯಾಯಾಲಯದಲ್ಲಿ ಉದಯನಿಧಿ ಸ್ಟಾಲಿನ್ ಗೆ ಸಂಬಂಧಿಸಿದ ಯಾವುದೇ ಪ್ರಕರಣದ ವಿಚಾರಣೆ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





