ಹೊಸನಗರ : ರಾಜ್ಯ ಸರ್ಕಾರವು ಸ್ವ-ಉದ್ಯೋಗ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಯುವಕ–ಯುವತಿಯರು ಅವುಗಳ ಪ್ರಯೋಜನ ಪಡೆದು ಸ್ವ-ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಬೇಳೂರು ಗೋಪಾಲಕೃಷ್ಣ ಅವರು ಸಲಹೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಕೈಗಾರಿಕೆ ಹಾಗೂ ಜಿಲ್ಲಾ ಪಂಚಾಯತ್ ಶಿವಮೊಗ್ಗ ಇವರ ಆಶ್ರಯದಲ್ಲಿ ಆಯೋಜಿಸಿದ್ದ ಉದ್ಯಮಶೀಲತಾ ಜಾಗೃತಿ ಶಿಬಿರದಲ್ಲಿ ಫಲಾನುಭವಿಗಳಿಗೆ ಸುಧಾರಿತ ಉಪಕರಣಗಳನ್ನು ವಿತರಿಸಿ ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಯುವಜನರಲ್ಲಿ ಸ್ವ-ಉದ್ಯೋಗದ ಬಗ್ಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಸ್ವ-ಉದ್ಯೋಗವು ಒಂದೊಂದು ಕುಟುಂಬದ ಬದುಕನ್ನು ಆರ್ಥಿಕವಾಗಿ ಸದೃಢಗೊಳಿಸುವುದರ ಜೊತೆಗೆ ಸಮಾಜದ ಸ್ವಾವಲಂಬನಕ್ಕೂ ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಲೇಖನವನ್ನು ಮುಂದುವರಿಸಿ ಓದಿ
ಈ ಸಂದರ್ಭ ಮೀನುಗಾರಿಕಾ ಇಲಾಖೆಯ ವತಿಯಿಂದ 2025–26ನೇ ಸಾಲಿನ ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ಮೀನುಗಾರಿಕಾ ಸಲಕರಣೆಗಳು, ಫೈಬರ್ ಉಕುಡ, ಹರಿಗೋಲು ಹಾಗೂ ಪೂರಕ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ ಹೂವಿನಕೋಣೆ, ತಾಲೂಕು ದಂಡಾಧಿಕಾರಿ ಭರತ್ ರಾಜ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ನರೇಂದ್ರ ಕುಮಾರ್, ಬಗರ್ ಹುಕುಂ ಸಮಿತಿಯ ಸದಸ್ಯ ಸ್ವಾಮಿ, ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

