ಶಿವಮೊಗ್ಗ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಆರಂಭವಾಗಿ ಇನ್ನೂ ಪೂರ್ಣಗೊಳ್ಳದಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಇನ್ನಷ್ಟು ವಿಳಂಬ ಮಾಡದೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದರು.
ತುಮಕೂರು–ಶಿವಮೊಗ್ಗ, ಚಿತ್ರದುರ್ಗ–ಶಿವಮೊಗ್ಗ, ಶಿಕಾರಿಪುರ–ರಾಣೇಬೆನ್ನೂರು, ಸಾಗರ ಟೌನ್ ಸೇರಿದಂತೆ ಹಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ವಿವಿಧ ಕಾರಣಗಳಿಂದ ವಿಳಂಬವಾಗಿರುವುದು ಸಭೆಯಲ್ಲಿ ಚರ್ಚೆಗೆ ಬಂದಿತು.
ಅರಣ್ಯ ಇಲಾಖೆ, ಕಂದಾಯ ಇಲಾಖೆ, ಭೂ ದಾಖಲೆಗಳ ಸರ್ವೆ ಇಲಾಖೆ, ತೋಟಗಾರಿಕೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಕಾಮಗಾರಿಗಳಿಗೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಪರಿಹಾರಧನ ವಿತರಣೆಯಲ್ಲಿ ವಿಳಂಬವಾಗುತ್ತಿರುವುದು ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ರಾಘವೇಂದ್ರ ಸೂಚಿಸಿದರು.
ಭೂಸ್ವಾಧೀನ, ಪರಿಹಾರ ಪಾವತಿ, ಜಂಟಿ ಸರ್ವೆ ವರದಿ, ಅರಣ್ಯ ಭೂಮಿ ವರ್ಗಾವಣೆ, ಮರಗಳ ತೆರವು, ಸ್ಥಳಾಂತರಿಸಬೇಕಾದ ಕಟ್ಟಡಗಳು ಹಾಗೂ ಇತರೆ ಇಲಾಖೆಗಳ ಅನುಮತಿಗಳ ಕಾರಣದಿಂದ ಕಾಮಗಾರಿಗಳು ಸ್ಥಗಿತಗೊಳ್ಳುತ್ತಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿ-206ರ ತುಮಕೂರು–ಶಿವಮೊಗ್ಗ ನಾಲ್ಕು ಪಥದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಎಂ.ಸಿ. ಹಳ್ಳಿ, ಕಾರೇಹಳ್ಳಿ ಟವರ್ ಪ್ರದೇಶ ಹಾಗೂ ಮಲವಗೊಪ್ಪ ಭಾಗದಲ್ಲಿ ಭೂಸ್ವಾಧೀನ ಸಮಸ್ಯೆಗಳು ಕಾಮಗಾರಿಗೆ ಅಡ್ಡಿಯಾಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದರು.
ಈ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಬೇಕು. ಸಲ್ಲದ ಕಾರಣಗಳನ್ನು ಹೇಳದೆ, ಜನರಿಗೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸೂಚಿಸಿದರು.

