ಶಿವಮೊಗ್ಗ: ಬಿಜೆಪಿಯ ಬಳ್ಳಾರಿ ಸಮಾವೇಶಕ್ಕೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿರುವುದನ್ನು ಸಂಸದ ಬಿ.ವೈ. ರಾಘವೇಂದ್ರ ಖಂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
ಶಿಕಾರಿಪುರದಲ್ಲಿ ಮಾತನಾಡಿದ ಅವರು, ಈ ಹಿಂದೆ ಇದೇ ಸ್ಥಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮಾವೇಶಕ್ಕೆ ಅವಕಾಶ ನೀಡಲಾಗಿತ್ತು. ಆಗ ಅನುಮತಿ ನೀಡಿದ ಸರ್ಕಾರ, ಈಗ ಬಿಜೆಪಿಯ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣಾ ಆಯೋಗದ ಅಡಿಯಲ್ಲಿ ನೋಂದಣಿಯಾಗಿವೆ. ಒಂದೇ ರಾಜ್ಯದಲ್ಲಿ ಒಂದು ಪಕ್ಷಕ್ಕೆ ಒಂದು ನಿಯಮ, ಇನ್ನೊಂದು ಪಕ್ಷಕ್ಕೆ ಮತ್ತೊಂದು ನಿಯಮ ಎಂಬ ಧೋರಣೆ ಸರಿಯಲ್ಲ ಎಂದು ರಾಘವೇಂದ್ರ ಹೇಳಿದರು.
ಗೃಹ ಸಚಿವರು ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಶಾಖೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿರುವ ವಿಚಾರವನ್ನೂ ಅವರು ಪ್ರಸ್ತಾಪಿಸಿದರು. ರಾಜಕೀಯದಲ್ಲಿ ಯಾರೂ ಶಾಶ್ವತವಾಗಿ ಅಧಿಕಾರದಲ್ಲಿ ಇರುವುದಿಲ್ಲ. ಸರ್ಕಾರ ದ್ವೇಷದ ಮನೋಭಾವ ಬಿಟ್ಟು ಪ್ರಜಾಪ್ರಭುತ್ವದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಆಯೋಜಿಸಿರುವ ಕಾರ್ಯಕ್ರಮ ಸಂಜೆ ವೇಳೆ ನಡೆಯಲಿದ್ದು, ಇದರಿಂದ ಶಾಲಾ ಮಕ್ಕಳಿಗೆ ಯಾವುದೇ ತೊಂದರೆ ಆಗುವುದಿಲ್ಲ. ಪ್ರಸ್ತುತ ಪರೀಕ್ಷೆಗಳೂ ಇಲ್ಲ. ಆದರೂ ಅನುಮತಿ ನಿರಾಕರಿಸಿರುವುದು ರಾಜಕೀಯ ಉದ್ದೇಶಪೂರಿತವಾಗಿದೆ ಎಂದು ಅವರು ಟೀಕಿಸಿದರು.
‘ಬಳ್ಳಾರಿ ಚಲೋ’ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಉತ್ತಮ ಜನಸ್ಪಂದನೆ ಸಿಗುತ್ತಿದೆ. ಸರ್ಕಾರದ ವಿರುದ್ಧ ಜನರಲ್ಲಿ ಹೆಚ್ಚುತ್ತಿರುವ ಅಸಮಾಧಾನವನ್ನು ಕಂಡು ಕಾಂಗ್ರೆಸ್ ಗಾಬರಿಗೊಂಡಿದೆ. ಆ ಭಯದಿಂದಲೇ ಸಮಾವೇಶಕ್ಕೆ ಅನುಮತಿ ನೀಡಲು ಹಿಂದೇಟು ಹಾಕುತ್ತಿದೆ ಎಂದು ಬಿ.ವೈ. ರಾಘವೇಂದ್ರ ವಾಗ್ದಾಳಿ ನಡೆಸಿದರು.

