ಶಿಕಾರಿಪುರ: ಉತ್ತಮ ಮಳೆಯಿಂದ ತುಂಬಿರುವ ಶಿಕಾರಿಪುರ ತಾಲೂಕಿನ ಅಂಜನಾಪುರ ಅಣೆಕಟ್ಟಿಗೆ ಕುಟುಂಬ ಸಮೇತ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ, ಸಂಪ್ರದಾಯದಂತೆ ಬಾಗಿನ ಅರ್ಪಿಸಿದರು.
ಅಂಜನಾಪುರ ಅಣೆಕಟ್ಟು ಈ ಭಾಗದ ರೈತರ ಜೀವನಾಡಿಯಾಗಿದ್ದು, ಸಾವಿರಾರು ಕೃಷಿಕ ಕುಟುಂಬಗಳ ಬದುಕಿಗೆ ಆಸರೆಯಾಗಿದೆ. ಉತ್ತಮ ಮಳೆಯಿಂದ ಅಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಜನರ ಪರವಾಗಿ ಬಾಗಿನ ಅರ್ಪಿಸಿ, ನಾಡಿನ ಪ್ರಗತಿ, ರೈತರ ನೆಮ್ಮದಿ ಹಾಗೂ ಜನರ ಸುಖ–ಶಾಂತಿಗಾಗಿ ಪ್ರಾರ್ಥಿಸಲಾಯಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.
ರೈತರ ಬದುಕಿಗೆ ಪ್ರಮುಖ ಜಲಮೂಲ
ಅಂಜನಾಪುರ ಅಣೆಕಟ್ಟಿನ ನೀರನ್ನು ಈ ಭಾಗದ ಕೃಷಿ ಚಟುವಟಿಕೆಗಳಿಗೆ ಬಳಸಲಾಗುತ್ತಿದ್ದು, ಅಣೆಕಟ್ಟು ತುಂಬಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಮುಂಗಾರು ಮಳೆ ಉತ್ತಮವಾಗಿರುವುದರಿಂದ ಜಲಾಶಯದ ನೀರಿನ ಸಂಗ್ರಹ ಹೆಚ್ಚಿದ್ದು, ಮುಂದಿನ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ನಿರೀಕ್ಷೆ ಇದೆ.
ಅಣೆಕಟ್ಟಿನ ಜೀವಜಲ ಸದಾ ಸಮೃದ್ಧವಾಗಿರಲಿ ಮತ್ತು ಕ್ಷೇತ್ರದ ರೈತರ ಬದುಕು ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಿರುವುದಾಗಿ ವಿಜಯೇಂದ್ರ ಹೇಳಿದ್ದಾರೆ.
ಕ್ಷೇತ್ರದ ಮುಖಂಡರು ಉಪಸ್ಥಿತಿ
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಕೃಷಿಕ ಸಮಾಜದ ಅಧ್ಯಕ್ಷ ಹುಲ್ಮಾರ್ ಮಹೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ರಾಜಶೇಖರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.