ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಎಚ್ಚರಿಸಿದ್ದಾರೆ.
ತಾಲೂಕು ಬಿಜೆಪಿ ಹಾಗೂ ರೈತ ಮೋರ್ಚಾ ವತಿಯಿಂದ ತಾಲೂಕು ಕಚೇರಿ ಎದುರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಶಿಕಾರಿಪುರ ತಾಲೂಕಿನ ರೈತರ ಪರ ಬಿ.ಎಸ್. ಯಡಿಯೂರಪ್ಪ ದೀರ್ಘಕಾಲ ಹೋರಾಟ ನಡೆಸಿದ್ದಾರೆ ಎಂದು ಹೇಳಿದರು.
ಮಧು ಬಂಗಾರಪ್ಪ ಅವರು ಯಡಿಯೂರಪ್ಪ ಕುರಿತು ಬಳಸಿದ ಭಾಷೆಯನ್ನು ವಿಜಯೇಂದ್ರ ಖಂಡಿಸಿ, ರಾಜಕೀಯ ಟೀಕೆ ಮಾಡುವಾಗ ಹಿರಿಯ ನಾಯಕರ ಬಗ್ಗೆ ಗೌರವ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಕಸ್ತೂರಿರಂಗನ್ ವರದಿ ಕುರಿತು ಮಾತನಾಡಿದ ಅವರು, ಮಲೆನಾಡಿನ ರೈತರು ಹಾಗೂ ಕಾಡಂಚಿನ ಜನರ ಮೇಲೆ ಅದರ ಪರಿಣಾಮವನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು. ವಿಶೇಷ ಅಧಿವೇಶನದಲ್ಲಿ ಈ ವಿಷಯದ ಕುರಿತು ಸರ್ಕಾರ ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕು ಎಂದು ಆಗ್ರಹಿಸಿದರು.
ಶಿಕಾರಿಪುರದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ರೂಪಿಸಲಾದ ನೀರಾವರಿ ಯೋಜನೆಗಳಿಗೆ ಅಗತ್ಯ ವಿದ್ಯುತ್ ಪೂರೈಕೆ ಮಾಡಬೇಕು. ರೈತರ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ನೀಡುವುದರ ಜೊತೆಗೆ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೂ ಸರ್ಕಾರ ಆದ್ಯತೆ ನೀಡಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.

