ಹೊಸನಗರ : ಗಾಳಿ ಸಹಿತ ಮಳೆಯಿಂದ ಮರ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಚಿಕಿತ್ಸೆಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಧ್ಯಕ್ಷರು ಒಟ್ಟಾಗಿ ₹32,600 ಸಂಗ್ರಹಿಸಿ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಜುಲೈ 24ರಂದು ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಯಿಂದ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಮೃತ (ಗರ್ತಿಕೆರೆ) ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೀಲಾವತಿ ಅವರ ಮೇಲೆ ಮರ ಬಿದ್ದಿತ್ತು. ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಟುಂಬದ ಆರ್ಥಿಕ ಸಂಕಷ್ಟ ಅರಿತು ನೆರವು
ವಿದ್ಯಾರ್ಥಿನಿಯ ಕುಟುಂಬದ ಆರ್ಥಿಕ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿರುವುದನ್ನು ಅರಿತ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಚಿಕಿತ್ಸೆಗೆ ನೆರವಾಗಲು ಮುಂದಾದರು.
ಪ್ರಾಚಾರ್ಯರು, ಉಪನ್ಯಾಸಕ ವರ್ಗ, ಸಿಡಿಸಿ ಅಧ್ಯಕ್ಷರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಕೈಲಾದಷ್ಟು ಹಣವನ್ನು ಸಂಗ್ರಹಿಸಿ ಒಟ್ಟು ₹32,600 ಮೊತ್ತವನ್ನು ವಿದ್ಯಾರ್ಥಿನಿಯ ಚಿಕಿತ್ಸೆಗೆ ನೀಡಿದರು.

ವಿದ್ಯಾರ್ಥಿಗಳ ಕಾರ್ಯಕ್ಕೆ ಮೆಚ್ಚುಗೆ
ಕಷ್ಟದಲ್ಲಿರುವ ಸಹಪಾಠಿಯ ನೆರವಿಗೆ ಧಾವಿಸಿ, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಸಹಾಯಹಸ್ತ ಚಾಚಿದ ವಿದ್ಯಾರ್ಥಿಗಳ ಕಾರ್ಯಕ್ಕೆ ಕಾಲೇಜಿನ ಪ್ರಾಚಾರ್ಯರು, ಸಿಡಿಸಿ ಅಧ್ಯಕ್ಷರು ಹಾಗೂ ಉಪನ್ಯಾಸಕ ವೃಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಹಾನುಭೂತಿ, ಸಹಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಶಿಕ್ಷಣದ ಪ್ರಮುಖ ಉದ್ದೇಶ. ಸಂಕಷ್ಟದಲ್ಲಿರುವ ಸಹಪಾಠಿಯ ನೆರವಿಗೆ ವಿದ್ಯಾರ್ಥಿಗಳು ಸ್ಪಂದಿಸಿರುವುದು ಶ್ಲಾಘನೀಯ’ ಎಂದು ಅವರು ತಿಳಿಸಿದ್ದಾರೆ.
