ಹೊಸನಗರ ; ಜೀವನದಲ್ಲಿ ಯಾವುದೇ ರೀತಿಯ ಸಂಶಯ ಸಂದೇಹಗಳು ಎದುರಾದಲ್ಲಿ ನಮ್ಮ ಸಂವಿಧಾನ ಓದಿದರೆ ಅದಕ್ಕೆ ಉತ್ತರ ಸಿಗುತ್ತದೆ ಎಂದು ಹೊಸನಗರ ತಹಸೀಲ್ದಾರ್ ಭರತ್ರಾಜ್ ಹೇಳಿದರು.
ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ತಾಲ್ಲೂಕು ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಹೊಸನಗರದ ತಾಲ್ಲೂಕು ಕಛೇರಿಯ ಆವರಣದಿಂದ ಪ್ರಮುಖ ಬೀದಿಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಸಿ ಸಂವಿಧಾನದ ದಿನಾಚರಣೆಯನ್ನು ಆಚರಿಸಲಾಗಿದ್ದು ನಂತರ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಸಮಾರಂಭ ನಡೆಸಿ ಅವರು ಮಾತನಾಡಿದರು.
ಎಲ್ಲರೂ ಸಮಾನತೆಯಿಂದ ಕಾಣಲು ಎಲ್ಲ ರೀತಿಯ ನ್ಯಾಯ ಒದಗಿಸಲು ಮಾರ್ಗಸೂಚಿಯಾಗಿರುವ ನಮ್ಮ ಸಂವಿಧಾನವನ್ನು ಮಕ್ಕಳು ಸೇರಿದಂತೆ ಎಲ್ಲರೂ ಓದಿ ತಿಳಿದುಕೊಳ್ಳಬೇಕು. ಸಂವಿಧಾನಕ್ಕೆ ಸಾಕಷ್ಟು ಆಯಾಮಗಳಿದ್ದು ಇದನ್ನು ಓದಿ ಅರ್ಥ ಮಾಡಿಕೊಳ್ಳಬೇಕು. ಇದರ ಮಹತ್ವ ತಿಳಿಯಲು ಸಾಕಷ್ಟು ಚಿಂತನೆ ನಡೆಸಬೇಕು. ನಮ್ಮ ಮಕ್ಕಳು ಸಂವಿಧಾನವನ್ನು ಓದಿ ತಿಳಿದುಕೊಳ್ಳುವುದು ಮೂಲಭೂತ ಹಕ್ಕಾಗಿರುತ್ತದೆ. ಜೊತೆಗೆ ಸಂವಿಧಾನ ತಿಳಿದುಕೊಂಡಾಗ ಸಮಾಜದಲ್ಲಿ ಯಾವುದೇ ತಪ್ಪು ಮಾಡಲು ಸಾಧ್ಯವಾಗುವುದಿಲ್ಲ. ಪ್ರತಿಯೊಬ್ಬರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರಚಸಿರುವ ನಮ್ಮ ಸಂವಿಧಾನವನ್ನು ಓದಿ ತಿಳಿದು ಸ್ವಾಸ್ಥ್ಯ ಸಮಾಜ ನಿರ್ಮಿಸಲು ಸಹಕರಿಸಿ ಎಂದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಸಮಾಜ ಕಲ್ಯಾಣಾಧಿಕಾರಿ ಗೀತಾ ಬಿ.ಎಂ, ಸರ್ಕಲ್ ಇನ್ಸ್ಪೆಕ್ಟರ್ ಗೌಡಪ್ಪಗೌಡರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹರೀಶ್, ಕರಿಬಸಪ್ಪ, ಮಂಜುನಾಥ್, ವಾಲ್ಮೀಕಿ ಸಮಾಜದ ಅಧ್ಯಕ್ಷ ಎಸ್.ಹೆಚ್ ನಿಂಗಮೂರ್ತಿ, ಡಾ. ಅಂಜನ್ಕುಮಾರ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ತಾಲ್ಲೂಕಿನ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳು ಆಗಮಿಸಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





