ಶಿವಮೊಗ್ಗ : ಹುಟ್ಟು ಮೂಕ ವ್ಯಕ್ತಿಯೊಬ್ಬರಿಗೆ ಅಂಗವಿಕಲರ ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಭದ್ರಾವತಿ ತಾಲೂಕು ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿದೆ.
ಪ್ರಕರಣದ ವಿವರ:
ಘಟನೆ: ಭದ್ರಾವತಿಯ ಡಿ.ಬಿ. ಹಳ್ಳಿಯ ಗಿರೀಶ್ ಎಂಬುವರು ತಮ್ಮ ಮೂಕ ತಂದೆಗೆ ಪಿಂಚಣಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕೆಲಸಕ್ಕೆ ಉಪ ತಹಶೀಲ್ದಾರ್ ಪುಷ್ಪಲತಾ ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಟ್ರಾಪ್: 2017ರ ಸೆಪ್ಟೆಂಬರ್ 21ರಂದು ಭದ್ರಾವತಿ ತಾಲೂಕು ಕಚೇರಿಯಲ್ಲಿ ₹5,000 ಮುಂಗಡ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಧಿಕಾರಿಯನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದರು.
ತನಿಖೆ & ವಾದ: ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್. ತಿಪ್ಪೇಸ್ವಾಮಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಂದರ್ ರಾಜ್ ವಾದ ಮಂಡಿಸಿದ್ದರು.
ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆಯ ತೀರ್ಪು ಪ್ರಕಟಿಸಿದೆ.

