ತೀರ್ಥಹಳ್ಳಿ : ಮಲೆನಾಡಿನ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಕೋಡು ಎಂಬಲ್ಲಿ ಭಾನುವಾರ ಬೆಳಗಿನಜಾವ ಸುಮಾರು 3 ಗಂಟೆ ಸಮಯದಲ್ಲಿ ಜಾನುವಾರುಗಳ ಕಳ್ಳತನ ಮಾಡಿದ್ದು ಸ್ಥಳೀಯರ ಜಾನುವಾರುಗಳನ್ನು ಕಳ್ಳರು ಕಳವು ಮಾಡಿ ಪರಾರಿಯಾಗಿರುವ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ.
ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಇನ್ನೋವಾ ಕಾರಿನಲ್ಲಿ ಬಂದಿದ್ದ ಕಳ್ಳರು ಸ್ಥಳೀಯರ ಮೂರ್ನಾಲ್ಕು ದನಗಳನ್ನು ವಾಹನದಲ್ಲಿ ತುಂಬಿಕೊಂಡು ಓಡಿಹೋದರು. ಘಟನೆ ಸಂಭವಿಸಿದ ವೇಳೆ ಕೆಲ ಯುವಕರು ವಾಹನವನ್ನು ಗಮನಿಸಿ ಬೆನ್ನಟ್ಟಲು ಹೊರಟರೂ, ಕಳ್ಳರು ವೇಗವಾಗಿ ಓಡಿಹೋಗಿ ಯುವಕರನ್ನು ತಪ್ಪಿಸಿಕೊಂಡಿದ್ದಾರೆ.
ಆದರೆ, ಕಳ್ಳರು ಬಳಸಿದ್ದ ಇನ್ನೋವಾ ಕಾರಿನ ನಂಬರ್ ಪ್ಲೇಟ್ ಹಾಗೂ ಕಾರಿನ ಸ್ಪಷ್ಟ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ದಾಖಲಾಗಿದ್ದ ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಹಿಡಿದಿವೆ. ಈ ದೃಶ್ಯಗಳನ್ನು ಆಧಾರವಾಗಿ ಆರೋಪಿಗಳನ್ನು ಬಂಧಿಸಿ ಕಳವು ಮಾಡಿದ ಜಾನುವಾರುಗಳನ್ನು ಪತ್ತೆಹಚ್ಚುವಂತೆ ಸ್ಥಳೀಯರು ಆಗುಂಬೆ ಪೊಲೀಸ್ ಠಾಣೆಗೆ ಆಗ್ರಹಿಸಿದ್ದಾರೆ.

ಈ ಘಟನೆಯಿಂದಾಗಿ ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರು ಕಳ್ಳತನದ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡ ಈ ಪ್ರಕರಣದ ಬಗ್ಗೆ ತಕ್ಷಣ ತೀವ್ರ ತನಿಖೆ ನಡೆಸಿ ಆರೋಪಿಗಳನ್ನು ಹಿಡಿಯಲು ಕ್ರಮ ಕೈಗೊಂಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





