ಹೊಸನಗರ : ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡು ತಮ್ಮ ಹಕ್ಕನ್ನು ಚಲಾಯಿಸಬೇಕು. ಯಾರೂ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಗ್ರಾಮ ಪಂಚಾಯತಿ ಹಾಗೂ ಹೋಬಳಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೊಸನಗರ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ (ಇಒ) ನರೇಂದ್ರಕುಮಾರ್ ತಿಳಿಸಿದ್ದಾರೆ.
ತಾಲೂಕಿನ ನಗರ ಮತ್ತು ಹುಂಚ ಹೋಬಳಿಗಳ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಸಹಯೋಗದೊಂದಿಗೆ ಪ್ರಚಾರ ವಾಹನದ ಮೂಲಕ ಜಾಗೃತಿ ಜಾಥಾ ನಡೆಸಿ ಅವರು ಮಾತನಾಡಿದರು.
ವಿಶೇಷ ಸಮಗ್ರ ಪರಿಷ್ಕರಣೆ (SIR) 2026ರ ಭಾಗವಾಗಿ ಈ ಅಭಿಯಾನ ನಡೆಯುತ್ತಿದೆ. 18 ವರ್ಷ ಪೂರೈಸಿದ ಎಲ್ಲ ಯುವಕ-ಯುವತಿಯರು ಫಾರ್ಮ್-06 ಅನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಬಿಎಲ್ಒಗಳಿಗೆ ಸಲ್ಲಿಸಬೇಕು. ಅಕ್ಟೋಬರ್ 1 ರಿಂದ ಅಕ್ಟೋಬರ್ 21 ರವರೆಗಿನ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದರೆ ಮಾತ್ರ ಮುಂಬರುವ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಹಾಗೂ ಮತದಾರರ ಗುರುತಿನ ಚೀಟಿ ದೊರೆಯಲಿದೆ ಎಂದು ಅವರು ವಿವರ ನೀಡಿದರು.
ಈ ಪ್ರಚಾರ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಪವನ್ ಕುಮಾರ್ ಹಾಗೂ ರಾಜೇಂದ್ರಕುಮಾರ್, ಪಿಡಿಒಗಳಾದ ಕಾವೇರಿ, ನಾಗರಾಜ್, ರಾಘವೇಂದ್ರ, ರಾಜರಾಮ್, ಮಂಜುಳಾ, ಪರಮೇಶ್ವರ್ ಸೇರಿದಂತೆ ನಗರ ಮತ್ತು ಹುಂಚ ಹೋಬಳಿಯ ವಿವಿಧ ಪಂಚಾಯತಿಗಳ ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

