ರಿಪ್ಪನ್ಪೇಟೆ ; ರಿಪ್ಪನ್ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಹೊಳೆಕೇವಿ ಗ್ರಾಮದ ರಾಜು ಗಾಯಗೊಂಡ ವ್ಯಕ್ತಿ. ಬೈಕ್ನಲ್ಲಿ ಸಾಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಸಾಗರ ಮೂಲದ ಕ್ರೇಟಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಬೈಕ್ ಸವಾರ ರಾಜು ರಸ್ತೆ ಮೇಲೆ ಬಿದ್ದು ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿ ಗಾಯಾಳುವಿನ ರಕ್ಷಣೆಗೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯನಿಮಿತ್ತ ತೀರ್ಥಹಳ್ಳಿಗೆ ತೆರಳಿ ಹಿಂದಿರುಗುತ್ತಿದ್ದ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಎಸ್.ಪಿ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುವಿನ ಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಸಮಯ ಪ್ರಜ್ಞೆ ತೋರಿದ ಅವರು ಗಾಯಾಳುವನ್ನು ಸಮಾಧಾನಪಡಿಸಿ ತಕ್ಷಣವೇ ಖಾಸಗಿ ವಾಹನದ ಮೂಲಕ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.
ಗಾಯಾಳುವಿಗೆ ರಿಪ್ಪನ್ಪೇಟೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ತಲೆಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಘಟನೆ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

