ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

0 103

ಸೊರಬ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಕೃಷಿ ಪಂಪ್‌ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಿದರು. ಆದರೆ, ಪ್ರಸ್ತುತ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಲೋಡ್ ಶೆಡ್ಡಿಂಗ್ ಮೂಲಕ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ತೋಟ, ಗದ್ದೆಗಳಲ್ಲಿ ಬೆಳೆದ ಬೆಳೆಗಳಿಗೆ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಬಿಸಿಲ ಪ್ರಮಾಣ ಹೆಚ್ಚಾಗಿರುವುದರಿಂದ ಬೆಳೆಗಳು ಒಣಗುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದ್ದು, ನಿರಂತರ ಜ್ಯೋತಿ ಯೋಜನೆಯಡಿ ಕೋಟ್ಯಂತರ ರೂ., ಖರ್ಚು ಮಾಡಿದ್ದರೂ ಮನೆ ಬಳಕೆಗೆ ವಿದ್ಯುತ್ ಪೂರೈಕೆ ಮರೀಚಿಕೆಯಾಗಿದೆ. ಪರೀಕ್ಷೆ ಸಮಯವಾಗಿರುವುದರಿಂದ ವಿದ್ಯಾರ್ಥಿಗಳು ಸಹ ಪರಿತಪಿಸುವಂತಾಗಿದೆ. ಈ ಬಗ್ಗೆ ಸರ್ಕಾರ ಕಿಂಚಿತ್ತು ಗಮನ ನೀಡುತ್ತಿಲ್ಲ. ಕೂಡಲೇ ಅಸಮರ್ಪಕ ವಿದ್ಯುತ್ ಲೋಡ್ ಶೆಡ್ಡಿಂಗ್ ಕೈ ಬಿಡಬೇಕು. ಕೃಷಿ ಪಂಪ್‌ಸೆಟ್ ಗಳಿಗೆ ನಿರಂತರ 10 ತಾಸು ಸಮರ್ಪಕವಾಗಿ ಹಗಲು ವೇಳೆ ತ್ರೀ ಫೇಸ್ ವಿದ್ಯುತ್ ನೀಡಬೇಕು. ಸಕಾಲಕ್ಕೆ ರೈತರಿಗೆ ಟ್ರಾನ್ಸ್‌ಫಾರ್ಮರ್ ಒದಗಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿಂದ ಮುಖ್ಯರಸ್ತೆ ಮಾರ್ಗವಾಗಿ ಮೆಸ್ಕಾಂ ಉಪ ವಿಭಾಗೀಯ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು. ನಂತರ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಡಿ.ಬಿ. ಅಣ್ಣಪ್ಪ ಹಾಲಘಟ್ಟ, ಸದಾನಂದ ಗೌಡ ಬಿಳಗಲಿ, ಶಿವಮೂರ್ತಿ ಮಂಡಗಳಲೆ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೆ.ಪಿ. ಪ್ರವೀಣ್ ಕುಮಾರ್, ಜಿಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ಪ್ರಮುಖರಾದ ಎಂ.ಡಿ. ಶೇಖರ್, ಕಲ್ಲಪ್ಪ ಚಿತ್ರಟ್ಟೆಹಳ್ಳಿ, ಸಂಜೀವ ನೇರಲಗಿ, ಪರಮೇಶ್ ನೆಗವಾಡಿ, ರವಿ ಬರಗಿ, ಸಂಜಯ್, ರವಿ ಕೇಸರಿ ಸೇರಿದಂತೆ ಸುಮಾರು 500 ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!