ಶಿವಮೊಗ್ಗ: ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ಪ್ಲಾಂಟೇಶನ್ ವಾಚರ್ ಒಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶಿಕಾರಿಪುರ ತಾಲೂಕಿನ ಶಿಡಿಗಿನಾಳು ಗ್ರಾಮದಲ್ಲಿ ನಡೆದಿದೆ.
ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಎನ್. ರಾಮು ಅವರು ಶಿಡಿಗಿನಾಳು ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕರಡಿ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದ ರಾಮು ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಫಯಾಜುದ್ದೀನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ನಾಯ್ಕ್ ವಿ.ಎಸ್. ಹಾಗೂ ವಲಯ ಅರಣ್ಯಾಧಿಕಾರಿ ಪರಶುರಾಮ ಎಲ್. ಅವರು ಆಸ್ಪತ್ರೆಗೆ ಭೇಟಿ ನೀಡಿ ರಾಮು ಅವರಿಗೆ ಧೈರ್ಯ ತುಂಬಿದರು.
ಅಧಿಕಾರಿಗಳು ಕರ್ತವ್ಯದಲ್ಲಿದ್ದ ವೈದ್ಯರೊಂದಿಗೆ ಚರ್ಚಿಸಿ, ಗಾಯಾಳುವಿಗೆ ಅಗತ್ಯವಾದ ಸೂಕ್ತ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರು. ಜೊತೆಗೆ ಸಂಕಷ್ಟದಲ್ಲಿರುವ ಸಿಬ್ಬಂದಿಗೆ ತಕ್ಷಣದ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದರು.
ಅರಣ್ಯ ಇಲಾಖೆ ಅಧಿಕಾರಿಗಳ ತ್ವರಿತ ಸ್ಪಂದನೆ, ನೆರವು ಹಾಗೂ ಕಾಳಜಿಗೆ ಗಾಯಾಳು ರಾಮು ಅವರ ಕುಟುಂಬಸ್ಥರು ಮತ್ತು ಅರಣ್ಯ ಸಿಬ್ಬಂದಿ ವರ್ಗದವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

