ಮೂಡಿಗೆರೆ ; ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.

ಘಾಟಿಯ ಎರಡನೇ ತಿರುವಿನ ಬಳಿ ಈ ಅಪಘಾತ ಸಂಭವಿಸಿದ್ದು ಕೊಟ್ಟಿಗೆಹಾರ ಕಡೆ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯು ಉಜಿರೆ ಕಡೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯ ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಲಾರಿ ಗ್ಯಾಸ್ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿಗೆ ಡಿಕ್ಕಿಯಾಗಿದ್ದು ಅಪಘಾತ ಮತ್ತಷ್ಟು ತೀವ್ರವಾಗಿದೆ.
ಈ ಘಟನೆಯಲ್ಲಿ ಸರ್ಕಾರಿ ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಘಟನೆಯಿಂದ ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಘಟನೆಯ ಮಾಹಿತಿ ಪಡೆದ ತಕ್ಷಣ ಬಣಕಲ್ ಮತ್ತು ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

