ಸಾಗರ ; ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಭ್ರೂಣ ಹತ್ಯೆ ನಡೆಸಿದ ಆರೋಪ ಎದುರಿಸುತ್ತಿದ್ದ ಸರ್ಕಾರಿ ವೈದ್ಯೆ ಡಾ. ಪ್ರತಿಮಾರನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಪೋಕ್ಸೊ ಪ್ರಕರಣ ಎಂದು ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡದೆ ಬಾಲಕಿಗೆ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರತಿಮಾ ಡಿ. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಗರ್ಭಪಾತ ಮಾಡಿಸಿದ ಹಿನ್ನೆಲೆಯಲ್ಲಿ ಡಾ. ಪ್ರತಿಮಾ ಸೇರಿ 9 ಜನರ ವಿರುದ್ಧ ನವೆಂಬರ್ 6ರಂದು ಪ್ರಕರಣ ದಾಖಲಾಗಿತ್ತು. ಸಾಗರ ನಗರ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದರು.
ಸಾಗರ ಟೌನ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದ ತನಿಖಾ ತಂಡ ಪ್ರಕರಣದ ಬಗ್ಗೆ ನೀಡಿದ ವರದಿ ಮತ್ತು ದಾಖಲೆ ಪರಿಶೀಲಿಸಿದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಾಗರ ತಾಲೂಕು ವೈದ್ಯಾಧಿಕಾರಿ ಜಂಟಿ ಪರಿಶೀಲನಾ ವರದಿ ಸಲ್ಲಿಸಿದ್ದರು.
ವೈದ್ಯೆ ಡಾ. ಪ್ರತಿಮಾ ವಿರುದ್ಧ ಕರ್ತವ್ಯ ಲೋಪ ಸೇರಿದಂತೆ ಗಂಭೀರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿವೆ. ಇದನ್ನು ಆದರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಘಟನೆ ನಡೆದ ದಿನದಿಂದಲೂ ತಲೆಮರೆಸಿಕೊಂಡಿದ್ದ ವೈದ್ಯೆ, ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಜಾಮೀನು ಪಡೆದು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು. ಆದರೆ, ತನಿಖೆಯ ಹಿತದೃಷ್ಟಿಯಿಂದ ಅವರನ್ನು ಸೇವೆಯಿಂದ ದೂರ ಇಡಲಾಗಿದೆ.
ಬಳ್ಳಾರಿಗೆ ಸ್ಥಳಾಂತರ !
ಅಮಾನತ್ತಿನ ಅವಧಿಯಲ್ಲಿ ಜೀವನಾಂಶ ಭತ್ಯೆ ಪಡೆಯಲು ಡಾ. ಪ್ರತಿಮಾ ಅವರನ್ನು ಬಳ್ಳಾರಿ ಜಿಲ್ಲೆಯ ಶಿರಗುಪ್ಪದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲದೆ, ಸಕ್ಷಮ ಪ್ರಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಟ್ಟು ತೆರಳಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





