Sagara

ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯ ಭೌತಿಕ ಸರ್ವೆಗೆ ಹರತಾಳು ಹಾಲಪ್ಪ ಆಗ್ರಹ

ಕಸ್ತೂರಿ ರಂಗನ್ ವರದಿಯನ್ನು ಕೇವಲ ತಿರಸ್ಕರಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕಂದಾಯ, ಅರಣ್ಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಂಟಿಯಾಗಿ ಭೌತಿಕ ಸರ್ವೆ ನಡೆಸಿ ವೈಜ್ಞಾನಿಕ ವರದಿ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯಿಸಿದ್ದಾರೆ.

ಸಾಗರ: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಹೊರಬಿದ್ದಿರುವ ಬೆನ್ನಲ್ಲೇ, ಮಾಜಿ ಸಚಿವ ಹರತಾಳು ಹಾಲಪ್ಪ ಮಲೆನಾಡು ಮತ್ತು ಕರಾವಳಿ ಭಾಗದ ರೈತರ ಪರವಾಗಿ ರಾಜ್ಯ ಸರ್ಕಾರಕ್ಕೆ ಮಹತ್ವದ ಸಲಹೆ ನೀಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಸ್ತೂರಿ ರಂಗನ್ ವರದಿಯನ್ನು ಕೇವಲ ವಿಧಾನಸಭೆಯಲ್ಲಿ ಏಕ ಸಾಲಿನ ನಿರ್ಣಯದ ಮೂಲಕ ತಿರಸ್ಕರಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಬದಲಾಗಿ, ಕೇರಳ ಸರ್ಕಾರ ಅನುಸರಿಸಿದ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸ್ಥಳಮಟ್ಟದ ಭೌತಿಕ ಸರ್ವೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಳೆಯ ಕರಡನ್ನೇ ಮತ್ತೆ ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ವರದಿ ಯಥಾವತ್ತಾಗಿ ಜಾರಿಯಾದರೆ ಪಶ್ಚಿಮ ಘಟ್ಟ ವ್ಯಾಪ್ತಿಯ ರೈತರು, ಕಾರ್ಮಿಕರು ಹಾಗೂ ಸ್ಥಳೀಯ ನಿವಾಸಿಗಳ ಬದುಕು ಅತಂತ್ರವಾಗುವ ಸಾಧ್ಯತೆ ಇದೆ ಎಂದು ಹಾಲಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಕೇಂದ್ರ ಸರ್ಕಾರದ ಮೇಲೆ ಅಂತಾರಾಷ್ಟ್ರೀಯ ಒತ್ತಡ, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಹಾಗೂ ಸುಪ್ರೀಂ ಕೋರ್ಟ್‌ನ ಕಣ್ಗಾವಲು ಇರುವುದರಿಂದ, ಕೇವಲ ತಿರಸ್ಕಾರದ ನಿರ್ಣಯಗಳು ಕಾನೂನಾತ್ಮಕವಾಗಿ ಸಾಕಾಗುವುದಿಲ್ಲ. ವೈಜ್ಞಾನಿಕ ಆಧಾರದ ಮೇಲೆ ರಾಜ್ಯದ ನಿಲುವು ಮಂಡಿಸಬೇಕಿದೆ ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿ ಉಪಗ್ರಹ ಸಮೀಕ್ಷೆಯ ಬದಲಾಗಿ ಸ್ಥಳಮಟ್ಟದ ಭೌತಿಕ ಸರ್ವೆ ನಡೆಸಲಾಗಿತ್ತು. ಅದರ ಮೂಲಕ ವಸತಿ ಪ್ರದೇಶಗಳು ಮತ್ತು ಕೃಷಿ ಭೂಮಿಯನ್ನು ಪರಿಸರ ಸೂಕ್ಷ್ಮ ವಲಯದಿಂದ ಕೈಬಿಟ್ಟು, ESA ವ್ಯಾಪ್ತಿಯನ್ನು ಗಣನೀಯವಾಗಿ ಕಡಿತಗೊಳಿಸಲಾಯಿತು. ಅದೇ ಮಾದರಿಯನ್ನು ಕರ್ನಾಟಕದಲ್ಲೂ ಅನುಸರಿಸಬೇಕು ಎಂದು ಹಾಲಪ್ಪ ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕಂದಾಯ, ಅರಣ್ಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಂಟಿಯಾಗಿ ಗ್ರಾಮಮಟ್ಟದಲ್ಲಿ ಭೌತಿಕ ಸರ್ವೆ ನಡೆಸಬೇಕು. ಜನವಸತಿ ಪ್ರದೇಶ, ಕೃಷಿ ಭೂಮಿ, ತೋಟಗಾರಿಕೆ ಪ್ರದೇಶ ಹಾಗೂ ಸ್ಥಳೀಯರ ಜೀವನೋಪಾಯಕ್ಕೆ ಸಂಬಂಧಿಸಿದ ಅಂಶಗಳನ್ನು ಸ್ಪಷ್ಟವಾಗಿ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪರಿಸರವೂ ಉಳಿಯಬೇಕು, ಜನರ ಜೀವನವೂ ಉಳಿಯಬೇಕು. ಈ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಹೊಸ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದರೆ ಮಾತ್ರ ಮಲೆನಾಡು ಮತ್ತು ಕರಾವಳಿ ಭಾಗದ ಜನರಿಗೆ ಶಾಶ್ವತ ನ್ಯಾಯ ಸಿಗುತ್ತದೆ ಎಂದು ಹರತಾಳು ಹಾಲಪ್ಪ ಹೇಳಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650