Shivamogga

ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ: ಹರತಾಳು ಹಾಲಪ್ಪ

ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ: ಹರತಾಳು ಹಾಲಪ್ಪ – h halappa

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ತಕ್ಷಣ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಏಳನೇ ಬಾರಿಗೆ ಕಸ್ತೂರಿ ರಂಗನ್ ವರದಿ ಸಂಬಂಧ ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಈ ವರದಿ ಅವೈಜ್ಞಾನಿಕ ಮತ್ತು ಸ್ಥಳೀಯ ಜನಜೀವನಕ್ಕೆ ಹೊಂದಿಕೆಯಾಗದಿರುವುದರಿಂದ ಇದಕ್ಕೆ ವಿರೋಧ ವ್ಯಕ್ತಪಡಿಸಬೇಕಾಗಿದೆ ಎಂದು ಹೇಳಿದರು.

2022ರಲ್ಲಿಯೂ ಇದೇ ರೀತಿಯ ಅಧಿಸೂಚನೆ ಹೊರಡಿಸಲಾಗಿತ್ತು. ಆ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಶೋಭಾ ಕರಂದ್ಲಾಜೆ, ಪ್ರಹ್ಲಾದ ಜೋಶಿ ಸೇರಿದಂತೆ ಹಲವರೊಂದಿಗೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರಾಗಿದ್ದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು ಎಂದು ಹಾಲಪ್ಪ ತಿಳಿಸಿದರು.

ಅಂದು ರಾಜ್ಯ ಸರ್ಕಾರದ ಕಡೆಯಿಂದಲೂ ಕಸ್ತೂರಿ ರಂಗನ್ ವರದಿ ಜಾರಿ ಮಾಡಬಾರದು ಎಂದು ಆಕ್ಷೇಪಣೆ ಸಲ್ಲಿಸಲಾಗಿತ್ತು. ಭೂಪೇಂದ್ರ ಯಾದವ್ ಅವರು ಪಶ್ಚಿಮಘಟ್ಟ ಭಾಗದ ವಾಸ್ತವ ಪರಿಸ್ಥಿತಿ ಅಧ್ಯಯನ ಮಾಡಲು ಸಮಿತಿ ಕಳುಹಿಸುವ ಭರವಸೆ ನೀಡಿದ್ದರು. ಅದಾದ ಬಳಿಕ ವರದಿ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆದಿರಲಿಲ್ಲ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಪಶ್ಚಿಮಘಟ್ಟ ಪ್ರದೇಶವು 20,668 ಚದರ ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ರಾಜ್ಯದ 1,449 ಹಳ್ಳಿಗಳು ಈ ವರದಿ ವ್ಯಾಪ್ತಿಗೆ ಬರುತ್ತವೆ. ಶಿವಮೊಗ್ಗ ಜಿಲ್ಲೆಯಲ್ಲೇ 447 ಗ್ರಾಮಗಳು ಗುರುತಿಸಲ್ಪಟ್ಟಿವೆ. ವರದಿ ಜಾರಿಯಾದರೆ ಮಲೆನಾಡು ಭಾಗದ ರೈತರು, ಗ್ರಾಮಸ್ಥರು ಹಾಗೂ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹಾಲಪ್ಪ ಆತಂಕ ವ್ಯಕ್ತಪಡಿಸಿದರು.

ಕೃಷಿ ಚಟುವಟಿಕೆಗಳ ಮೇಲೆಯೂ ನಿರ್ಬಂಧದ ಭೀತಿ ಮೂಡಿದ್ದು, ಜನರು ತಮ್ಮದೇ ಭೂಮಿಯಲ್ಲಿ ಬದುಕಲು ಕಷ್ಟಪಡುವ ಪರಿಸ್ಥಿತಿ ಬರಬಹುದು. ಇದು ಮಲೆನಾಡಿನ ಜನರಿಗೆ ಮತ್ತೊಂದು “ಮುಳುಗಡೆ” ಸಮಸ್ಯೆಯಂತೆ ಆಗಬಹುದು ಎಂದು ಅವರು ಎಚ್ಚರಿಸಿದರು.

ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಅಧಿಕೃತ ಆಕ್ಷೇಪಣೆ ಸಲ್ಲಿಸಬೇಕು. ಪಶ್ಚಿಮಘಟ್ಟದ ಜನರ ಬದುಕು, ಕೃಷಿ ಮತ್ತು ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಮುಂದಾಗಬೇಕು ಎಂದು ಹರತಾಳು ಹಾಲಪ್ಪ ಒತ್ತಾಯಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650