ಸಾಗರ : ತಾಲ್ಲೂಕಿನಾದ್ಯಂತ ತೀವ್ರ ಮಳೆಯ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 8ರಂದು ಸಾಗರ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳು, ಡಿಪ್ಲೊಮಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಡಾ. ಪ್ರತಿಭಾ ಆದೇಶ ಬಿಡುಗಡೆ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿಗಳ ನಿರ್ದೇಶನದ ಅನ್ವಯ, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಆರೋಗ್ಯದ ಪರಿಗಣನೆಗೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕದಿಂದ ಪ್ರೌಢಶಾಲೆಗಳು, ಪದವಿ ಪೂರ್ವ ಮತ್ತು ಡಿಪ್ಲೊಮಾ ಕಾಲೇಜುಗಳಾದ್ಯಂತ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ರಜೆಗೆ ಒಳಪಟ್ಟಿವೆ.

ಜುಲೈ 8ರಂದು ನಡೆಯಬೇಕಿದ್ದ ತರಗತಿಗಳನ್ನು ಮುಂದಿನ ರಜಾ ದಿನಗಳಲ್ಲಿ ಶಾಲೆ ನಡೆಸಿ ಹೊಂದಾಣಿಕೆ ಮಾಡಲು ತಹಸೀಲ್ದಾರ್ ಆದೇಶದಲ್ಲಿ ಸೂಚಿಸಲಾಗಿದೆ. ಕಳೆದ ಎರಡು ದಿನಗಳಿಂದಲೂ ಸಾಗರ ತಾಲ್ಲೂಕಿನಲ್ಲಿ ಮಳೆಯ ತೀವ್ರತೆಯಿಂದ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
ಮಳೆ ಇನ್ನು ಮುಂದುವರೆಯುವ ಸಾಧ್ಯತೆ ಇರುವುದರಿಂದ, ಸ್ಥಳೀಯ ಆಡಳಿತ ಮತ್ತು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಜಾಗೃತಿ ವಹಿಸುತ್ತಿರುವುದು ಗಮನಾರ್ಹ.

